ಸರ್ಕಾರ ಟೋಲ್‌ ರದ್ದುಪಡಿಸಿ, ನಂತರವಷ್ಟೇ ಜಂಭ ಕೊಚ್ಚಿಕೊಳ್ಳಲಿ: ಬ್ರಿಜೇಶ್‌ ಕಾಳಪ್ಪ

ಸೋಮವಾರ, 13 ಮಾರ್ಚ್ 2023 (20:24 IST)
ಬಿಜೆಪಿ ಸರ್ಕಾರಗಳು ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತನ್ನ ಸಾಧನೆಯೆಂದು ಬಿಂಬಿಸಿಕೊಳ್ಳುವುದಾದರೆ, ಟೋಲ್‌ ರದ್ದುಪಡಿಸಿ ಪೂರ್ತಿ ಹಣವನ್ನು ಸರ್ಕಾರವೇ ಭರಿಸಲಿ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಸಂವಹನಾ ಉಸ್ತುವಾರಿ ಬ್ರಿಜೇಶ್‌ ಕಾಳಪ್ಪ ಆಗ್ರಹಿಸಿದರು.ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬ್ರಿಜೇಶ್‌ ಕಾಳಪ್ಪ, ಬೆಂಗಳೂರು-ಮೈಸೂರು ನಡುವೆ ನೂತನವಾಗಿ ನಿರ್ಮಿಸಿರುವ ಹೆದ್ದಾರಿಯನ್ನು ಬಿಜೆಪಿ ನಾಯಕರು ದಶಪಥವೆಂದು ಕರೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ದಶಪಥ ಎಂದು ಕರೆಯುವುದನ್ನು ಎಲ್ಲೂ ನಿರಾಕರಣೆ ಮಾಡಿಲ್ಲ. ಆದರೆ ಎನ್‌ಎಚ್‌ಎಐ ಹೊರಡಿಸಿರುವ ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಆರು ಪಥವೆಂದು ಉಲ್ಲೇಖಿಸಲಾಗಿದೆ. ಹತ್ತು ಪಥವನ್ನು ಆರು ಪಥ ಮಾಡಲಾಗಿದ್ದು, ಉಳಿದ 40% ಪಥಗಳು ಏನಾಯಿತು? ಬಿಜೆಪಿ ಸರ್ಕಾರವು 40% ಕಮಿಷನ್‌ ಪಡೆಯುವಂತೆ 40% ಪಥಗಳನ್ನು ಕೂಡ ಇಲ್ಲವಾಗಿಸಿದೆ. ಇದು ದಶಪಥವೋ ಆರು ಪಥವೋ ಎಂಬ ಬಗ್ಗೆ ಸರ್ಕಾರ ಹಾಗೂ ಬಿಜೆಪಿ ಸ್ಪಷ್ಟನೆ ನೀಡಬೇಕು ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ರು.

ವೆಬ್ದುನಿಯಾವನ್ನು ಓದಿ