ಸಿಎಂ ಸಿದ್ದು, ಪರಮೇಶ್ವರ ವಿರುದ್ಧ ರಾಹುಲ್ ಗಾಂಧಿಗೆ ಪತ್ರ

ಭಾನುವಾರ, 3 ಮೇ 2015 (12:26 IST)
ರಾಜ್ಯದ ಆಡಳಿತಾರೂಡ ಕಾಂಗ್ರೆಸ್‍ನಲ್ಲಿ ಮತ್ತೆ ಅಸಮಾಧಾನ ಹೆಡೆ ಎತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಜಿ.ಪರಮೇಶ್ವರ್ ಅವರ ವಿರುದ್ಧ ಆರೋಪ ಮಾಡಿ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಪತ್ರ ಬರೆದಿದ್ದಾರೆ.

'ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 13ಕ್ಕೆ 2 ವರ್ಷ ತುಂಬುತ್ತಿದೆ. ಆದರೂ ಸಹ ನಿಗಮ ಮಂಡಳಿಗಳ ನೇಮಕಾತಿ ನೆನಗುದಿಗೆ ಬಿದ್ದಿದೆ. ಪಕ್ಷ ಅಧಿಕಾರಕ್ಕೆ ಬರುವ ಮೊದಲು ಬಳ್ಳಾರಿಯಲ್ಲಿ ನಡೆದ ಪಾದಯಾತ್ರೆಯಲ್ಲಿ ಲಕ್ಷಾಂತರ ಕಾರ್ಯಕರ್ತರು ಭಾಗವಹಿಸಿದ್ದರು. ಆ ಸಮಯದಲ್ಲಿ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ನೀಡುತ್ತೇವೆಂದು ಭರವಸೆ ನೀಡಲಾಗಿತ್ತು. ಆದರೆ ಅಧಿಕಾರಕ್ಕೆ ಬಂದ ಮೇಲೆ ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಸಿಎಂ ಹಾಗೂ ಸಚಿವರು ಕಾರ್ಯಕರ್ತರನ್ನು ಸಂಪೂರ್ಣವಾಗಿ ಮರೆತಿದ್ದಾರೆ', ಎಂದು ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.
 
'ಸಿಎಂ, ಕೆಪಿಸಿಸಿ ಅಧ್ಯಕ್ಷರಿಗೆ ನಿಗಮ ಮಂಡಳಿ ನೇಮಕಾತಿ ನಡೆಸಲು ಸಮಯವಿಲ್ಲ. ಕೆಪಿಸಿಸಿಗೆ ಬಂದಿರುವ ಪಟ್ಟಿಯನ್ನು ನೀವೇ ತರಿಸಿಕೊಂಡು, ಪರಿಶೀಲನೆ ಮಾಡಿ ಕಾರ್ಯಕರ್ತರಿಗೆ ನಿಗಮ ಮಂಡಳಿಗಳಲ್ಲಿ ಅವಕಾಶ ಮಾಡಿಕೊಡಿ. ಇದು  ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ', ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ರಾಹುಲ್ ಗಾಂಧಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ