ಒಂದು ಕೋಟಿ ಲಂಚ ಆರೋಪ ಪ್ರಕರಣ: ಉಪ ಲೋಕಾಯುಕ್ತರ ಆದೇಶ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ ಅಶ್ವಿನ್ ರಾವ್

ಬುಧವಾರ, 1 ಜುಲೈ 2015 (12:57 IST)
ಲೋಕಾಯುಕ್ತ ಇಲಾಖೆಯ ಭ್ರಷ್ಟಾಚಾರ ಪ್ರಕರಣದ ತನಿಖೆಯನ್ನು ಮುಂದುವರಿಸುವಂತೆ ರಾಜ್ಯದ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ. ಅಡಿ ಅವರು ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿರುವುದನ್ನು ಪ್ರಶ್ನಿಸಿ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರು ಇಂದು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. 
 
ಪ್ರಕರಣ ಸಂಬಂಧ ರಿಟ್ ಅರ್ಜಿ ಸಲ್ಲಿಸಿರುವ ಅಶ್ವಿನ್ ರಾವ್, ಲೋಕಾಯುಕ್ತ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಕರಣವನ್ನು ರಾಜ್ಯದ ಮುಖ್ಯ ಲೋಕಾಯುಕ್ತರು ಲೋಕಾಯುಕ್ತ ತನಿಖೆಗೆ ತಡೆ ನೀಡಿ ಸಿಸಿಬಿಗೆ ವಹಿಸಿದ್ದರು. ಇದಕ್ಕೆ ಕಾರಣ ನಿಸ್ಪಕ್ಷಪಾತ ತನಿಖೆ ನಡೆಯಲಿ ಎಂಬುದಾಗಿತ್ತು. ಆದರೆ ಇದಕ್ಕೆ ರಾಜ್ಯದ ಜನತೆಯಿಂದ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯ ಲೋಕಾಯುಕ್ತರೇ ಖುದ್ದು ಸರ್ಕಾರಕ್ಕೆ ಎಸ್ಐಟಿ ರಚಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್ಐಟಿ ರಚಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ. ಆದರೆ ಈ ನಡುವೆ ರಾಜ್ಯದ ಉಪ ಲೋಕಾಯುಕ್ತ ನ್ಯಾ.ಸುಭಾಷ್ ಬಿ. ಅಡಿ ಅವರು ತನಿಖೆ ನಡೆಯುತ್ತಿರುವ ಪ್ರಕರಣದ ತನಿಖೆಯನ್ನೇ ಮುಂದುವರಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಆದರೆ ಆ ತನಿಖೆ ಸರಿಯಲ್ಲ ಎಂದು ಆರೋಪಿಸಿ ಅರ್ಜಿ ಸಲ್ಲಿಸಿದ್ದಾರೆ. 
 
ಇನ್ನು ಈ ಅರ್ಜಿಯ ವಿಚಾರಣೆ ಇಂದೇ ವಿಚಾರಣೆಗೆ ಬರಲಿದೆ ಎಂದು ಕೋರ್ಟ್ ಮೂಲಗಳು ತಿಳಿಸಿವೆ. 
 
ಏನಿದು ಪ್ರಕರಣ: 
ಲೋಕಾಯುಕ್ತ ಇಲಾಖೆಯ ಅಧಿಕಾರಿಗಳೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದು, ಒಂದು ಕೋಟಿ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ಮುಂದುವರಿಸಿದ್ದ ಬೆಂಗಳೂರು ಲೋಕಾಯುಕ್ತ ಎಸ್‌ಪಿ ಸೋನಿಯಾ ನಾರಂಗ್ ಅವರು ಈ ಪ್ರಕರಣದ ತನಿಖೆ ನಡೆಸುತ್ತಿದ್ದರು. ಆದರೆ ಅವರ ತನಿಖೆಗೆ ರಾಜ್ಯದ ಮುಖ್ಯ ಲೋಕಾಯುಕ್ತ ನ್ಯಾ.ವೈ.ಭಾಸ್ಕರ್ ರಾವ್ ಅವರು ತಡೆ ನೀಡಿ ಪ್ರಕರಣವನ್ನು ತಮ್ಮ ಸ್ವಂತ ಅಧಿಕಾರ ಬಳಸಿ ಸಿಸಿಬಿಗೆ ವಹಿಸಿದ್ದರು. 
 
ಈ ಸಂಬಂಧ ಪ್ರತಿಕ್ರಿಯಿಸಿದ್ದ ರಾಜ್ಯದ ಉಪ ಲೋಕಾಯುಕ್ತ ಸುಭಾಷ್ ಬಿ. ಅಡಿ ಅವರು, ಭ್ರಷ್ಟಾಚಾರದ ಪ್ರಕರಣಗಳನ್ನು ತನಿಖೆ ನಡೆಸುವ ಅಧಿಕಾರ ಸಿಸಿಬಿಗೆ ಇದೆಯೇ ಎಂಬ ಬಗ್ಗೆ ನನಗೆ ತಿಳಿದಿಲ್ಲ. ಆದರೆ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸುತ್ತಿರುವಾಗಿ ಮುಖ್ಯ ಲೋಕಾಯುಕ್ತರು ತಮ್ಮ ಬಳಿ ಸಲಹೆ ಪಡೆದಿಲ್ಲ ಎಂದು ಆರೋಪಿಸಿದ್ದರು. ಅಲ್ಲದೆ ಸರ್ಕಾರ ಎಸ್ಐಟಿ ರಚಿಸಿರುವ ಬಗ್ಗೆ ನನಗೆ ಅಧಿಕೃತ ಮಾಹಿತಿ ತಲುಪಿಲ್ಲ ಎಂದಿದ್ದ ಅವರು, ಪ್ರಕರಣದ ತನಿಖೆಯನ್ನು ಮುಂದುವರಿಸುವಂತೆ ನಾರಂಗ್ ಅವರಿಗೆ ಆದೇಶಿದ್ದರು. ಈ ಹಿನ್ನೆಲೆಯಲ್ಲಿ ಅಶ್ವಿನ್ ರಾವ್ ಅರ್ಜಿ ದಾಖಲಿಸಿದ್ದಾರೆ. 
 

ವೆಬ್ದುನಿಯಾವನ್ನು ಓದಿ