ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಸಿಬಿಐಗೆ ವಹಿಸೋಲ್ಲ:ಸಿಎಂ ಸಿದ್ದರಾಮಯ್ಯ

ಶನಿವಾರ, 9 ಜುಲೈ 2016 (12:10 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ಅಧಿಕಾರಿಗಳು ಸಮಗ್ರವಾಗಿ ತನಿಖೆ ನಡೆಸುತ್ತಿದ್ದಾರೆ. ತನಿಖೆಯ ನಂತರ ಸತ್ಯಾಸತ್ಯತೆ ಬಹಿರಂಗವಾಗಲಿದೆ. ಖಾಸಗಿ ಸುದ್ದಿ ವಾಹಿನಿಯಲ್ಲಿ ನೀಡಿರುವ ಹೇಳಿಕೆಯ ಕುರಿತು ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಮೇಲೆ 5 ಪ್ರಕರಣಗಳನ್ನು ಸಿಐಡಿ ತನಿಖೆಗೆ ಒಪ್ಪಿಸಿದ್ದೇನೆ. ಬಿಜಿಪಿಯ 5 ವರ್ಷದ ಆಡಳಿತದಲ್ಲಿ ಒಂದೇ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿಲ್ಲ. ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆಗೆ ಬೇರೆ ಕಾರಣಗಳು ಇರಬಹುದು ಎಂದು ಹೇಳಿದರು.
 
ಆಡಳಿತ ವ್ಯವಸ್ಥೆಯಲ್ಲಿ ಕೆಲವು ಲೋಪಗಳಿದ್ದು, ವ್ಯವಸ್ಥೆಯಲ್ಲಿ ಕೆಲವು ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರಬಹುದು. ಕಾನೂನು ಬಾಹಿರ ಚಟುವಟಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ