ಮಹದಾಯಿ ತೀರ್ಪಿನ ಅಧ್ಯಯನದ ನಂತ್ರ ಹೋರಾಟ ರೂಪರೇಷೆ ನಿರ್ಧಾರ: ಸಚಿವ ಪಾಟೀಲ್

ಗುರುವಾರ, 28 ಜುಲೈ 2016 (17:53 IST)
ಮಹದಾಯಿ ನ್ಯಾಯಾಧಿಕರಣದ ಮಧ್ಯಂತರ ತೀರ್ಪಿನ ಸಂಪೂರ್ಣ ಮಾಹಿತಿ ಪಡೆದುಕೊಂಡು ಮುಂದಿನ ಹೋರಾಟದ ರೂಪರೇಷೆಗಳನ್ನು ನಿರ್ಧರಿಸುತ್ತೇವೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.
 
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಪರವಾಗಿ ಹಿರಿಯ ವಕೀಲರಾದ ನಾರಿಮನ್ ಅವರು ಸಮರ್ಥವಾಗಿ ವಾದ ಮಂಡಿಸಿದ್ದಾರೆ. ಆದರೆ, ಯಾವ ಕಾರಣಕ್ಕಾಗಿ ನ್ಯಾಯಾಧಿಕರಣ ರಾಜ್ಯದ ಮಧ್ಯಂತರ ಅರ್ಜಿಯನ್ನು ವಜಾಗೊಳಿಸಿದೆ ಎಂಬುವುದರ ಕುರಿತು ಪರಿಶೀಲನೆ ನಡೆಸುತ್ತೇನೆ. ಈಗಾಗಲೇ ರಾಜ್ಯಪರ ವಕೀಲರು ತೀರ್ಪಿನ ಕುರಿತು ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.
 
ರಾಜ್ಯ ಸರಕಾರ ನೆಲ, ಜಲ, ಭಾಷೆ ಕಾಪಾಡಲು ಬದ್ಧವಾಗಿದೆ. ಶೀಘ್ರದಲ್ಲಿ ರೈತ ಸಂಘಟನೆಗಳೊಂದಿಗೆ ಸರ್ವ ಪಕ್ಷಗಳ ಸಭೆ ಕರೆದು ಮುಂದಿನ ಹೋರಾಟದ ಕುರಿತು ನಿರ್ಧರಿಸುತ್ತೇನೆ. ಮಹದಾಯಿ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಪರಿಹರಿಸಲಿ ಎಂದು ಆಗ್ರಹಿಸಿದರು.
 
ಮಹದಾಯಿ ಟ್ರಿಬ್ಯುನಲ್ ನ್ಯಾಯಾಧಿಕರಣ ತೀರ್ಪಿನಿಂದ ರೈತರ ಉಗ್ರ ಹೋರಾಟ ನಡೆಸುತ್ತಿದ್ದಾರೆ. ಆದರೆ, ಯಾರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳಬಾರದು ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಮನವಿ ಮಾಡಿಕೊಂಡರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ