ಸರ್ಕಾರದ ಬದ್ಧತೆಗೂ ರಾಜೀನಾಮೆಗೂ ಸಂಬಂಧವಿಲ್ಲ: ಸಿದ್ದರಾಮಯ್ಯ

ಗುರುವಾರ, 29 ಜನವರಿ 2015 (16:02 IST)
ಅಬಕಾರಿ ಸಚಿವ ಸತೀಶ್ ಜಾರಕಿಹೋಳಿ ಅವರ ರಾಜೀನಾಮೆ ವಿಷಯಕ್ಕೆ ಸಂಬಂಧ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ಬದ್ಧತೆಗೂ ಸತೀಶ್ ಜಾರಕಿಹೋಳಿ ಅವರ ರಾಜೀನಾಮೆಗೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ. 
 
ನಗರಕ್ಕೆ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಸಿದ್ದರಾಮಯ್ಯನವರನ್ನು ಮಾಧ್ಯಮಗಳು, ಅಬಕಾರಿ ಸಚಿವರ ರಾಜೀನಾಮೆ ಹಿನ್ನೆಲೆಯಲ್ಲಿ ಸಂಧಾನಕ್ಕೆಂದು ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರು ರಾಜಧಾನಿ ಬೆಂಗಳೂರಿಗೆ ಬಂದಿದ್ದಾರೆ. ರಾಜೀನಾಮೆ ಸಂಬಂಧ ನಿಮ್ಮ ನಿಲುವೇನು, ನಿಮ್ಮ ಸರ್ಕಾರಕ್ಕೆ ಇದು ಕಳಂಕ ಎನಿಸುವುದಿಲ್ಲವೇ ಎಂದು ಕೇಳಿದ ಪ್ರಶ್ನೆಗೆ ಪ್ರತ್ಯುತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಸರ್ಕಾರದ ಬದ್ಧತೆಗೂ ಸತೀಶ್ ಜಾರಕಿಹೋಳಿ ಅವರ ರಾಜೀನಾಮೆಗೂ ಯಾವುದೇ ಸಂಬಂಧ ಇಲ್ಲ. ಇಂದು ಸಂಜೆ ನಿಯೋಗವನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ರಾಜೀನಾಮೆಗೆ ಸಂಬಂಧಿಸಿದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. 
 
ಸಂಪುಟದಲ್ಲಿ ತಮಗೆ ಸೂಕ್ತ ಸ್ಥಾನ-ಮಾನ ನೀಡಿಲ್ಲ ಎಂಬ ಅಸಮಧಾನದಿಂದ ಅಬಕಾರಿ ಸಚಿವ ಸತೀಶ್ ಜಾರಕಿಹೋಳಿ ಅವರು ಕಳೆದ ಮಂಗಳವಾರ ಸಂಜೆ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ಮುಖಂಡರ ತಂಡ ಸಂಧಾನಕ್ಕೆಂದು ಬೆಂಗಳೂರಿಗೆ ಆಗಮಿಸಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಸಂಜೆ ನಿಯೋಗದೊಂದಿಗೆ ಮಾತುಕತೆ ನಡೆಸುವ ಸಾಧ್ಯತೆ ಇದೆ. 

ವೆಬ್ದುನಿಯಾವನ್ನು ಓದಿ