ಕಾನೂನಿಗಿಂತ ಯಾರು ದೊಡ್ಡವರಲ್ಲ: ಸಚಿವ ಎಂ.ಆರ್.ಸೀತಾರಾಂ

ಶನಿವಾರ, 23 ಜುಲೈ 2016 (13:55 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿಗಿಂತ ಯಾರು ದೊಡ್ಡವರಲ್ಲ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಡಿಕೇರಿ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಹೇಳಿದ್ದಾರೆ.
 
ಮಡಿಕೇರಿ ಜಿಲ್ಲೆಯ ಸೋಮವಾರ ಪೇಟೆಯ ಹಾರಂಗಿ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ. ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣ ಕುರಿತು ದೊಡ್ಡದಾಗಿ ಪ್ರತಿಭಟಿಸದ ವಿಪಕ್ಷಗಳು ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾತ್ರ ಪ್ರತಿಭಟನೆ ಕೈಗೊಳ್ಳುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.  
 
ಕೆಲವರು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರುತ್ತಾರೆ. ರಾಜ್ಯದಲ್ಲಿ ಏನಾದರು ಆದರೆ ರಾಜ್ಯ ಸರಕಾರವೇ ಹೊಣೆ ಎಂದು ಹೇಳಿದರೆ ಹೇಗೆ? ಇಂತಹ ಆರೋಪಗಳಿಗೆ ಸರಕಾರ ಹೇಗೆ ಉತ್ತರಿಸಬೇಕು? ಎಂದು ಮಡಿಕೇರಿ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರು ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು.
 
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ಸಿಐಡಿ ವರದಿ ಸರಕಾರಕ್ಕೆ ಸಲ್ಲಿಕೆಯಾಗಿದೆ ಎಂದ ಸಚಿವರು ನಂತರ ಹಿರಿಯ ಅಧಿಕಾರಿಗಳ ಬಳಿ ವರದಿ ಇದ್ದು ನಂತರ ಸರಕಾರಕ್ಕೆ ಸಲ್ಲಿಕೆಯಾಗುತ್ತದೆ ಎಂದು ಗೊಂದಲದ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ