ಪ್ರತಿಪಕ್ಷಗಳಿಂದ ಜನರ ದಾರಿ ತಪ್ಪಿಸುವ ಹುನ್ನಾರ: ಜಿ.ಪರಮೇಶ್ವರ್

ಮಂಗಳವಾರ, 19 ಜುಲೈ 2016 (13:48 IST)
ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಹಾಗೂ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
 
ನಗರದ ಕೆಪಿಸಿಸಿ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಹಾಗೂ ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಈಗಾಗಲೇ ನ್ಯಾಯಾಂಗ ತನಿಖೆಗೆ ನೀಡಲಾಗಿದೆ. ಸುಮ್ಮನೆ ಪ್ರತಿಪಕ್ಷಗಳು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಆರೋಪಿಸಿದರು.
 
ಮಡಿಕೇರಿ ಹೆಚ್ಚುವರಿ ಕೆಜೆಎಂಎಫ್ ನ್ಯಾಯಾಲಯದ ಆದೇಶದಂತೆ ಕೆ.ಜೆ.ಜಾರ್ಜ್ ಅವರು ನೈತಿಕ ಹೊಣೆ ಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ರಾಜೀನಾಮೆ ನೀಡಿರುವುದನ್ನು ಪಕ್ಷ ಮೆಚ್ಚಿಕೊಂಡಿದೆ. ಆದರೆ, ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಹೇಳಿದರು.
 
ಬಿಜೆಪಿ ಸರಕಾರ ಅಧಿಕಾರದಲ್ಲಿದ್ದ ಸಮಯದಲ್ಲಿ ಗಣಿ ಹಗರಣ ಸೇರಿದಂತೆ 13 ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡುವಂತೆ ನಾವು ಒತ್ತಾಯಿಸಿದ್ದೇವು. ಆದರೆ, ಬಿಜೆಪಿ ಒಂದು ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲಿಲ್ಲ. ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಮೇಲೆ 8 ಪ್ರಕರಣಗಳನ್ನು ಸಿಬಿಐ ತನಿಖೆಗೆ ನೀಡಿದ್ದೇವೆ ಎಂದು ಹೇಳಿದರು.
 

ವೆಬ್ದುನಿಯಾವನ್ನು ಓದಿ