ನಮ್ಮ ಗುರಿ 150 ಸೀಟ್ ಗೆಲ್ಲುವುದು: ಯಡಿಯೂರಪ್ಪ

ಶನಿವಾರ, 6 ಮೇ 2017 (13:04 IST)
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸೀಟ್ ಗೆಲ್ಲುವುದು ಮುಖ್ಯ ಗುರಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
 
ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ ಅವರು, ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಬರಗಾಲದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು
 
ಯಡಿಯೂರಪ್ಪ ಅಧ್ಯಕ್ಷೀಯ ಭಾಷಣದ ಆರಂಭದಲ್ಲಿ ಎಲ್ಲಾ ನಾಯಕರುಗಳ ಹೆಸರುಗಳನ್ನು ಹೇಳಿದರೂ ಈಶ್ವರಪ್ಪ ಮತ್ತು ಶೆಟ್ಟರ್ ಹೆಸರಗಳನ್ನು ಹೇಳದೇ ಉಭಯ ಸದನಗಳ ನಾಯಕರೇ ಎಂದು ಹೇಳಿ ಪರೋಕ್ಷವಾಗಿ ಟಾಂಗ್ ನೀಡಿದರು. 
 
ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ರಾಜ್ಯದ ಜನತೆ ಕಾಂಗ್ರೆಸ್ ಸರಕಾರದ ಅಡಳಿತದಿಂದ ಬೇಸತ್ತಿದ್ದಾರೆ. ಮುಂದಿನ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದರು.
 
ಪಕ್ಷದ ಸಂಘಟನೆಯ ಬಗ್ಗೆ ಗಂಭೀರವಾಗಿ ಪರಿಗಣಿಸುತ್ತೇವೆ. ಯಡಿಯೂರಪ್ಪ ಎಂದಿಗೂ ಕುರ್ಚಿಗೆ ಅಂಟಿಕೊಂಡು ಕುಳಿತವನಲ್ಲ. ರಾಜ್ಯದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ಸಚಿವರ ಭ್ರಷ್ಟಾಚಾರ ಮಾಡಿದ್ದರೂ ಸಿಎಂ ಮೌನವಾಗಿದ್ದಾರೆ ಎಂದು ಕಿಡಿಕಾರಿದರು.
 
ಉಪಚುನಾವಣೆಯ ಸೋಲಿನಿಂದ ಹತಾಶರಾಗಬೇಡಿ. ಎರಡೂ ಕ್ಷೇತ್ರಗಳಲ್ಲಿ ಸೋತಿದ್ದರೂ ಹೆಚ್ಚು ಮತಗಳನ್ನು ಗಳಿಸಿದ್ದೇವೆ ಎನ್ನುವುದು ಮರೆಯಬೇಡಿ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150 ಸೀಟ್ ಗೆಲ್ಲುವ ಗುರಿಯಿಟ್ಟುಕೊಂಡು ಮುಂದೆ ಸಾಗೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕರೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ