ಕಾವೇರಿ ವಿವಾದಕ್ಕೂ ಬಿಬಿಎಂಪಿ ವಿಚಾರಕ್ಕೂ ಸಂಬಂಧವಿಲ್ಲ: ದೇವೇಗೌಡರು

ಭಾನುವಾರ, 25 ಸೆಪ್ಟಂಬರ್ 2016 (14:55 IST)
ಬಿಬಿಎಂಪಿ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಮೈತ್ರಿ ವಿಚಾರ ಕುರಿತು ಎಚ್‌.ಡಿ.ಕುಮಾರಸ್ವಾಮಿ ಮಾತನಾಡುತ್ತಾರೆ. ಕಾವೇರಿ ವಿವಾದಕ್ಕೂ ಬಿಬಿಎಂಪಿ ಮೇಯರ್ ಚುನಾವನೆಗೂ ಯಾವುದೇ ಸಂಬಂಧವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಸ್ಪಷ್ಟಪಡಿಸಿದರು. 

ತುಮಕೂರಿನಲ್ಲಿ ನಡೆದ ನಾಡ ಪ್ರಭು ಕೇಪೆಗೌಡ ಜಯಂತೋತ್ಸವದಲ್ಲಿ ಮಾತನಾಡಿದ ಅವರು, ಮಳೆ ಕೊರತೆಯಿಂದ ನಾವು ಸಂಕಷ್ಟದಲ್ಲಿದೇವೆ. ಕಾವೇರಿ ಜಲಾನಯನದ 10 ಜಿಲ್ಲೆಯಲ್ಲಿ ನೀರಿನ ಅಭಾವವಿದೆ. ಕಾವೇರಿ ಹಾಗೂ ಹೇಮಾವತಿ ಜಲಾನಯನ ಪ್ರದೇಶದ ರೈತರು ಬಿತ್ತನೆ ಮಾಡಲು ನೀರಿಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡದಂತೆ ತೆಗೆದುಕೊಂಡ ನಿರ್ಣಯದಿಂದ ನ್ಯಾಯಾಂಗ ನಿಂದನೆಯಾಗುತ್ತದೆ ಎಂದು ಸುಪ್ರೀಂಕೋರ್ಟ್ ಮಾಜಿ ನ್ಯಾಯಾಧೀಶರು ಹೇಳುತ್ತಾರೆ. ಆದರೆ, ಇದು ನ್ಯಾಯಾಂಗ ನಿಂದನೆಯಾಗಲು ಹೇಗೆ ಸ್ಯಾಧ್ಯ ಎಂದು ಪ್ರಶ್ನಿಸಿದರು. 
 
ಕಾವೇರಿ ನದಿ ನೀರು ಹಂಚಿಕೆ ವಿವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ಏಕೆ ಸಾಧ್ಯವಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡರು ಪ್ರಶ್ನಿಸಿದ್ದಾರೆ.
 
ವಿವಾದಕ್ಕೆ ಸಂಬಂಧಿಸಿದಂತೆ ಉಭಯ ರಾಜ್ಯಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಲಿ. ಆವಾಗ ವಾಸ್ತವ ಸ್ಥಿತಿ ತಿಳಿಯುತ್ತದೆ. ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ. ಇಲ್ಲದಿದ್ದರೇ ಉಪವಾಸ ಸತ್ಯಾಗ್ರಹ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ತಿಳಿಸಿದ್ದೆ ಎಂದರು.
 
ಒಂದು ಹನಿ ನೀರಿಗೂ ಭಿಕ್ಷೆ ಬೇಡುವ ಸ್ಥಿತಿ ಎದುರಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರು ಇಲ್ಲ. ತಮಿಳುನಾಡಿನಲ್ಲಿ ಸಾಕಷ್ಟು ನೀರಿದೆ. ಅನ್ಯಾಯದ ವಿರುದ್ಧ ಹೊಡೆದಾಟ ನಡೆಸಲು ಸಾಧ್ಯವಿಲ್ಲ. ನಾವು ಯಾರಿಗೂ ಅನ್ಯಾಯ ಮಾಡಿಲ್ಲ ಎಂದರು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ