ಬೆಂಗಳೂರು: ಆಸ್ತಿ ನೋಂದಣಿ ಶುಲ್ಕವನ್ನು ದುಪ್ಪಟ್ಟು ಮಾಡಿ ಇಂದಿನಿಂದ ಅನ್ವಯವಾಗುವಂತೆ ಸರ್ಕಾರ ಜಾರಿ ಮಾಡಿ ಆದೇಶಿಸಿದೆ. ಸರ್ಕಾರದ ನಡೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ.
ಬಸ್, ವಿದ್ಯುತ್, ನೀರು, ಹಾಲು ಮೆಟ್ರೋ ದರ ಸೇರಿದಂತೆ ವಿವಿಧ ದರ ಹೆಚ್ಚಳ ಮಾಡಿದ ಸಿಎಂ ಸಿದ್ದರಾಮಯ್ಯ ಸರ್ಕಾರ ಮತ್ತೆ ಬಿಗ್ ಶಾಕ್ ನೀಡಿದೆ. ಇಂದಿನಿಂದಲೇ ಆಸ್ತಿ ಖರೀದಿ ನೋಂದಣಿ ಶುಲ್ಕ ದುಪ್ಪಟ್ಟಾಗಿದೆ.
ಆಸ್ತಿ ಖರೀದಿ ನೋಂದಣಿ ಶುಲ್ಕವನ್ನು ಹಿಂದಿನ ದರಕ್ಕಿಂತ ದುಪ್ಪಟ್ಟು ದರಕ್ಕೆ ಏರಿಕೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಶುಲ್ಕ ಶೇ 1 ರಿಂದ ಶೇ 2 ರಷ್ಟು ಏರಿಕೆಯಾಗಿದೆ. ಮಾರ್ಗಸೂಚಿ ದರದ ಪ್ರಮಾಣಕ್ಕೆ ಅನುಗುಣವಾಗಿ ನೋಂದಣಿ ಶುಲ್ಕ ನಿಗದಿ ಮಾಡಲಾಗಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಈವರೆಗೂ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿದಂತೆ ಸ್ಥಿರಾಸ್ತಿ ಖರೀದಿ ವೇಳೆ ಶೇ 1ರಷ್ಟು ನೋಂದಣಿ ಶುಲ್ಕ ಹಾಗೂ ಶೇ .5.6ರಷ್ಟು ಮುದ್ರಾಂಕ ಶುಲ್ಕ ಸೇರಿ ಶೇ 6.6ರಷ್ಟು ಶುಲ್ಕ ಇತ್ತು. ಆದರೆ ಈಗ ಏರಿಕೆಯಿಂದ ಒಟ್ಟು ಶೇ 7.6ರಷ್ಟು ಶುಲ್ಕ ಕಟ್ಟಬೇಕಾಗುತ್ತದೆ.
ಗ್ಯಾರಂಟಿ ಯೋಜನೆಗಾಗಿ ಹಣ ಹೊಂದಿಸಲು ಸರ್ಕಾರ ಬೇಕಾಬಿಟ್ಟಿ ದರ ಏರಿಕೆ ಮಾಡುವುದು ಸರಿಯಲ್ಲ. ಈ ಸರ್ಕಾರ ಬಂದಾಗಿನಿಂದ ಬೆಲೆ ಏರಿಕೆ ನಿರಂತರವಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.