ಬೆಂಗಳೂರು: ರಸ್ತೆ ಗುಂಡಿ ತಪ್ಪಿಸಲು ಹೋಗಿ ಬೆಂಗಳೂರಿನಲ್ಲಿ ಬೈಕ್ ಚಾಲನೆ ಮಾಡುತ್ತಿದ್ದ ಯುವತಿ ಲಾರಿಗೆ ಢಿಕ್ಕಿ ಹೊಡೆದು ಸಾವನ್ನಪ್ಪಿದ್ದಾಳೆ. ಘಟನೆ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಿಯಾಂಕ್ ಕುಮಾರ್ ಪೂನಿಯಾ ಎಂಬ ಯುವತಿ ಅಣ್ಣನ ಜೊತೆ ಬೈಕ್ ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂಭವಿಸಿದೆ. ರಸ್ತೆ ಗುಂಡಿ ತಪ್ಪಿಸಲು ಹೋದಾಗ ಬೈಕ್ ಗೆ ಲಾರಿ ಢಿಕ್ಕಿ ಹೊಡೆದಿದೆ. ಪರಿಣಾಮ ಯುವತಿ ಸಾವನ್ನಪ್ಪಿದ್ದಾಳೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರ್ ಅಶೋಕ್ ಮೃತ್ಯುಕೂಪಗಳಾಗಿರುವ ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮತ್ತೊಂದು ಜೀವ ಬಲಿಯಾಗಿದೆ. ಸರ್ಕಾರದ ನಿರ್ಲಕ್ಷ್ಯ, ಬೇವಾವಾಬ್ದಾರಿತನ, ಅಸಾಮರ್ಥ್ಯಕ್ಕೆ ಇನ್ನೆಷ್ಟು ಅಮಾಯಕ ಜೀವಗಳು ಬಲಿಯಾಗಬೇಕು ಸ್ವಾಮಿ?
ಸಿಟಿ ರೌಂಡ್ಸ್ ಹೆಸರಿನಲ್ಲಿ ಟಿ-ಶರ್ಟು, ಕೂಲಿಂಗ್ ಗ್ಲಾಸು ಹಾಕಿಕೊಂಡು ಲಾಲ್ ಬಾಗ್, ಕಬ್ಬನ್ ಪಾರ್ಕುಗಳಲ್ಲಿ ಪೋಟೋ ಶೂಟ್, ರೀಲ್ಸ್ ಮಾಡಿಬಿಟ್ಟರೆ ಬೆಂಗಳೂರಿನ ರಸ್ತೆಗುಂಡಿ ಸಮಸ್ಯೆ ಸರಿಹೋಗುತ್ತಾ ಡಿ.ಕೆ.ಶಿವಕುಮಾರ್ ಅವರೇ? ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಬೆಂಗಳೂರನ್ನು ಹಾಳು ಮಾಡಿಬಿಟ್ಟರಲ್ಲ ಸ್ವಾಮಿ. ನಾಚಿಕೆಯಾಗಬೇಕು ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಎಂದು ಹಿಡಿಶಾಪ ಹಾಕಿದ್ದಾರೆ.