ಕಾಂಗ್ರೆಸ್ ವಿರುದ್ಧ ಆರ್.ಅಶೋಕ್ ಮೌನ ಪ್ರತಿಭಟನೆ

ಶನಿವಾರ, 5 ಸೆಪ್ಟಂಬರ್ 2015 (11:41 IST)
ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಒಗ್ಗೂಡಿ ಮೈತ್ರಿ ಮಾಡಿಕೊಳ್ಳುವ ಮೂಲಕ ಬಿಬಿಎಂಪಿ ಗದ್ದುಗೆ ಏರಲು ಸಿದ್ಧವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿಯು ಎರಡನೇ ದಿನವಾದ ಇಂದು ಬಿಬಿಎಂಪಿ ಮುಖ್ಯ ಕಚೇರಿ ಎದುರು ಮೌನ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಂಡಿದೆ.  
 
ಬಿಬಿಎಂಪಿ ಚುನಾವಣಾ ಉಸ್ತುವಾರಿ ಹೊತ್ತಿದ್ದ ಬಿಜೆಪಿ ಶಾಸಕ, ಮಾಜಿ ಡಿಸಿಎಂ ಆರ್.ಅಶೋಕ್ ಅವರ ನೇತೃತ್ವದಲ್ಲಿ ಈ ಮೌನ ಮೆರವಣಿಗೆಯ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಬಿಜೆಪಿ ಅಧ್ಯಕ್ಷ ಸುಬ್ಬಣ್ಣ, ಶಾಸಕ ಎಸ್.ರಘು, ನಗರದ ಇತರೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ನೂತನವಾಗಿ ಆಯ್ಕೆಯಾಗಿರುವ ಕಾರ್ಪೊರೇಟರ್‌ಗಳು ಭಾಗಿಯಾಗಿದ್ದು, ಬಾಯಿಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. 
 
ಪ್ರತಿಭಟನಾಕಾರರು ಬಿಬಿಎಂಪಿ ಕಚೇರಿಯಿಂದ ರಾಜಭವನದ ವರೆಗೆ ಮೆರವಣಿಗೆ ತರಳಲಿದ್ದು, ಆ ಮೂಲಕ ಕಾಂಗ್ರೆಸ್ ಕಾರ್ಯವೈಖರಿಯನ್ನು ಖಂಡಿಸಲಿದ್ದಾರೆ ಎಂದೂ ತಿಳಿದು ಬಂದಿದೆ.
 
ಇನ್ನು ಈ ಹಿಂದೆ ಪ್ರತಿಕ್ರಿಯಿಸಿದ್ದ ಆರ್.ಅಶೋಕ್ ಅವರು, ಕಾಂಗ್ರೆಸ್‌ನ ಅಪವಿತ್ರ ಮೈತ್ರಿ ವಿರುದ್ಧ ಇಂದಿನಿಂದ ನಿರಂತರವಾಗಿ 5 ದಿನಗಳ ಕಾಲ ಪ್ರತಿಭಟನೆ ನಡೆಸಲಾಗುವುದು ಎಂದಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆಯೂ ಕೂಡ ನಗರದ ಟೌನ್ ಹಾಲ್ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಗಿತ್ತು. ಇಂದು ಬಿಬಿಎಂಪಿ ಕಚೇರಿಯಲ್ಲಿ ನಡೆಸಲಾಗುತ್ತಿದ್ದು, ಇದು ಪಕ್ಷದ ಎರಡನೇ ದಿನದ ಪ್ರತಿಭಟನೆಯಾಗಿದೆ. 

ವೆಬ್ದುನಿಯಾವನ್ನು ಓದಿ