ಗ್ಯಾರಂಟಿಗಳಿಂದ ಅಭಿವೃದ್ಧಿಯಾಗುತ್ತಿಲ್ಲವೆಂದು ನಿಮ್ಮವರೇ ಒಪ್ಪಿಕೊಂಡ್ರಲ್ಲಾ: ಆರ್ ಅಶೋಕ್ ಟಾಂಗ್

Krishnaveni K

ಸೋಮವಾರ, 13 ಅಕ್ಟೋಬರ್ 2025 (11:18 IST)
ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂಬುದನ್ನು ನಿಮ್ಮವರೇ ಒಪ್ಪಿಕೊಂಡ್ರಲ್ಲಾ ಎಂದು ಆರ್ ವಿ ದೇಶಪಾಂಡೆ ಹೇಳಿಕೆ ಉಲ್ಲೇಖಿಸಿ ವಿಪಕ್ಷ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ.

ಪಂಚ ಗ್ಯಾರಂಟಿಗಳಿಂದ ಅಭಿವೃದ್ಧಿಯಾಗುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ, ಸಚಿವ ಆರ್ ವಿ ದೇಶಪಾಂಡೆಯವರೇ ದಾಂಡೇಲಿಯ ಕಾರ್ಯಕ್ರಮವೊಂದರಲ್ಲಿ ಬಹಿರಂಗ ಹೇಳಿಕೆ ನೀಡಿದ್ದರು.

ಅವರ ಹೇಳಿಕೆಯನ್ನು ಉಲ್ಲೇಖಿಸಿ ಅಶೋಕ್ ವ್ಯಂಗ್ಯ ಮಾಡಿದ್ದಾರೆ. ‘ಗ್ಯಾರೆಂಟಿಗಳಿಂದ ಅಭಿವೃದ್ಧಿಗೆ ಹಿನ್ನೆಡೆ ಆಗಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿರುವುದು ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಗಳು ರಾಜ್ಯವನ್ನ ಯಾವ ಅಧೋಗತಿಗೆ ತಳ್ಳಿದೆ ಎನ್ನುವುದಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.

ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎನ್ನುವ ಹಪಹಪಿಯಿಂದ ಬೇಕಾಬಿಟ್ಟಿ ಗ್ಯಾರೆಂಟಿ ಯೋಜನೆಗಳನ್ನು ಮಾಡಿದ ಕಾಂಗ್ರೆಸ್ ಪಕ್ಷಕ್ಕೆ ಈಗ ಗ್ಯಾರೆಂಟಿಗಳು ಬಿಸಿ ತುಪ್ಪವಾಗಿದೆ.

ಸಿಎಂ ಸಿದ್ದರಾಮಯ್ಯ ಸರ್ಕಾರ ಪಾಪರ್ ಆಗಿದೆ ಎನ್ನುವ ಕೂಗು ಕಾಂಗ್ರೆಸ್ ಪಕ್ಷದಲ್ಲೇ ಏಳುತ್ತಿದ್ದು ಈ ಹಿಂದೆ ಎಐಸಿಸಿ ಅಧ್ಯಕ್ಷ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರೇ "ಸರ್ಕಾರದ ಬಳಿ ರಸ್ತೆಗೆ ಒಂದು ಬುಟ್ಟಿ ಮಣ್ಣು ಹಾಕಲೂ ದುಡ್ಡಿಲ್ಲ" ಎಂದು ಒಪ್ಪಿಕೊಂಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅವರು "ರಸ್ತೆ ಬೇಕು ಅಂದರೆ ಗ್ಯಾರೆಂಟಿ ಸ್ಕೀಮ್ ಬಂದ್ ಮಾಡಬೇಕಾಗುತ್ತದೆ" ಎಂದು ಹೇಳಿದ್ದರು.

ಈಗ ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಶಾಸಕರು, ಮಾಜಿ ಸಚಿವರಾದ ಶ್ರೀ ಆರ್ ವಿ ದೇಶಪಾಂಡೆ ಅವರು "ನಾನು ಮುಖ್ಯಮಂತ್ರಿ ಆಗಿದ್ದರೆ ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡುತ್ತಿರಲಿಲ್ಲ" ಎಂದು ಹೇಳಿರುವುದು ಸಿಎಂ ಸಿದ್ದರಾಮಯ್ಯ ಅವರು ಎಷ್ಟು ಅಸಮರ್ಥ ಮುಖ್ಯಮಂತ್ರಿ ಎನ್ನುವುದನ್ನ ಮತ್ತೊಮ್ಮೆ ಸಾಬೀತು ಮಾಡಿದೆ’ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ