ಕಾಂಗ್ರೆಸ್ ಪಕ್ಷದವರೇ ಛೀ ಥೂ ಎಂದು ಉಗಿದರೂ ಎಂಥಾ ಭಂಡ ಬಾಳು ಇವರದ್ದು: ಆರ್ ಅಶೋಕ್

Krishnaveni K

ಸೋಮವಾರ, 23 ಜೂನ್ 2025 (17:08 IST)
ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧವೇ ಕಾಂಗ್ರೆಸ್ ಹಿರಿಯ ಶಾಸಕರಾದ ಬಿಆರ್ ಪಾಟೀಲ್ ಮತ್ತು ರಾಜು ಕಾಗೆ ಭ್ರಷ್ಟಾಚಾರದ ಆರೋಪ ಮಾಡಿದ ಹಿನ್ನಲೆಯಲ್ಲಿ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಪಕ್ಷದವರೇ ಛೀ ಥೂ ಎಂದು ಉಗಿದರೂ ಇವರದ್ದು ಎಂಥಾ ಭಂಡ ಬಾಳು ಇರಬೇಕು ಎಂದಿದ್ದಾರೆ.

ರಾಜ್ಯದಲ್ಲಿ ವಸತಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಬಿಆರ್ ಪಾಟೀಲ್ ನೀಡಿದ್ದ ಹೇಳಿಕೆಯ ಅಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ರಾಜು ಕಾಗೆ ಕೂಡಾ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದು ರಾಜೀನಾಮೆಯ ಬೆದರಿಕೆ ಹಾಕಿದ್ದಾರೆ.

ಇದೀಗ ಈ ಬಗ್ಗೆ ಆರ್ ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಶಾಸಕರೇ ಒಬ್ಬಬ್ಬರಾಗಿ ಕಾಂಗ್ರೆಸ್ ಸರ್ಕಾರಕ್ಕೆ ಛೀ...ಥೂ... ಅಂತ ಉಗೀತಾ ಇದ್ದಾರೆ!

ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ ಅವರು ವಸತಿ ಇಲಾಖೆಯಲ್ಲಿ ನಡೆಯುತ್ತಿರುವ "ಮನಿ ಫಾರ್ ಮನೆ" ಭ್ರಷ್ಟಾಚಾರವನ್ನು ಬಯಲಿಗೆಳೆದ ಬೆನ್ನಲ್ಲೇ ಈಗ ಮತ್ತೊಬ್ಬ ಕಾಂಗ್ರೆಸ್ ಶಾಸಕ ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲು ಮಾಡಿದ್ದಾರೆ.

ಅನುಮೋದನೆಗೊಂಡ ಯೋಜನೆ ಕಾಮಗಾರಿಗಳಿಗೆ ವರ್ಕ್ ಆರ್ಡರ್ ಕೊಡೋಕೆ ಎರಡು ವರ್ಷದಿಂದ ವಿಳಂಬವಾಗುತ್ತಿದೆ, ಸಿಎಂನ ಭೇಟಿ ಮಾಡಿ ರಾಜೀನಾಮೆ ಕೊಡ್ತಿನಿ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ರಾಜು ಕಾಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿ.ಆರ್.ಪಾಟೀಲ್ ಅವರ ಪರಿಸ್ಥಿತಿಯೇ ತಮಗೂ ಬಂದಿದೆ ಎಂದು ಅಳಲು ತೋಡಿಕೊಂಡಿದ್ದಾರೆ ಎಂದು ಅಶೋಕ್ ಟೀಕಿಸಿದ್ದಾರೆ.

 
ನಿಮ್ಮ ನಾಲಾಯಕ್ ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿ ಬಗ್ಗೆ ನಿಮ್ಮದೇ ಪಕ್ಷದ ಶಾಸಕರು ದಿನಕ್ಕೊಂದು ಸರ್ಟಿಫಿಕೇಟ್ ಕೊಡುತ್ತಿದ್ದಾರಲ್ಲ ಸಿಎಂ ಸಿದ್ದರಾಮಯ್ಯನವರೇ, ಇನ್ನೆಷ್ಟು ದಿನ ಈ ಭಂಡ ಬಾಳು. ರಾಜೀನಾಮೆ ಕೊಟ್ಟು ಕರ್ನಾಟಕದ ಘನತೆ, ಗೌರವ ಕಾಪಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ