ಗುಂಡಿನ ದಾಳಿ ತುತ್ತಾಗಿದ್ದ ಜಿ.ಪಂ ಸದಸ್ಯ ಸಾವು

ಬುಧವಾರ, 25 ಮಾರ್ಚ್ 2015 (15:47 IST)
ಇಂದು ಬೆಳಗ್ಗೆ ದುಷ್ಕರ್ಮಿಗಳ ಗುಂಡಿನ ದಾಳಿಗೆ ಒಳಗಾಗಿದ್ದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯನೋರ್ವ ಚಿಕಿತ್ಸೆ ಫಲಿಸದೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.   
 
ಸಾವನ್ನಪ್ಪಿದ ವ್ಯಕ್ತಿಯನ್ನು ಹನುಂತ ಲಾದಾ(45) ಎಂದು ಹೇಳಲಾಗಿದ್ದು, ನಗರದ ನಿವಾಸಿಯಾಗಿದ್ದ ಇವರು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ರಾಜಕೀಯ ವೈಷಮ್ಯ ಹಿನ್ನೆಲೆಯಲ್ಲಿಯೇ ಗುಂಡಿನ ದಾಳಿ ನಡೆಸಿರಬಹುದು ಎಂದು ಶಂಕಿಸಲಾಗಿದೆ. 
 
ಇಂದು ಬೆಳಗ್ಗೆ ನಗರದ ಅಂಬೇಡ್ಕರ್ ವೃತ್ತದ ಬಳಿ ಅಪರಿಚಿತ ವ್ಯಕ್ತಿಯೋರ್ವ ಲಾದಾ ಎದೆಗೆ ಗುಂಡಿಕ್ಕಿ ಪರಾರಿಯಾಗಿದ್ದ. ಬಳಿಕ ರಕ್ತಸ್ರಾವದಿಂದ ಬಳಲುತ್ತಿದ್ದ ಲಾದಾ ಅವರನ್ನು ಸ್ಥಳೀಯರು ಇಲ್ಲಿನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಸಾವನ್ನಪ್ಪಿದ್ದಾನೆ. 
 
ಇನ್ನು ಪ್ರಕರಣವು ನಗರದ ನ್ಯೂಟೌನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ. 
 
ಈ ಹಿಂದೆ ಲಾದಾ ಅವರ ಸಹೋದರಿ ವಿದ್ಯಾವತಿ ಅವರ ಮೇಲೂ ಕೂಡ ಇದೇ ರೀತಿಯ ದಾಳಿ ನಡೆದಿತ್ತು. ಬಳಿಕ ಪ್ರಕರಣವನ್ನು ಭೇಧಿಸಿದ್ದ ಪೊಲೀಸರು, ರುಬಿನ್ ಎಂಬ ಆರೋಪಿಯನ್ನು ಬಂಧಿಸಿದ್ದರು. ತರುವಾಯ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಇಲ್ಲಿನ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಇದೇ ಆರೋಪಿ ಕುಟುಂಬ ಸದಸ್ಯರೇ ಈ ಪ್ರಕರಣದಲ್ಲಿಯೂ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ.  

ವೆಬ್ದುನಿಯಾವನ್ನು ಓದಿ