ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

Sampriya

ಮಂಗಳವಾರ, 22 ಏಪ್ರಿಲ್ 2025 (20:02 IST)
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಪರಿಸ್ಥಿತಿಯನ್ನು ಪರಿಶೀಲಿಸಲು ತುರ್ತು ಸಭೆ ನಡೆಸಿದ್ದಾರೆ. ಮಾತ್ರವಲ್ಲದೆ, ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ಕಳುಹಿಸಿದ್ದಾರೆ.

ಪಹಲ್ಗಾಮ್‌ನಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡು, ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು.

ಹಲ್ಗಾಮ್‌ನ ಬೈಸರನ್‌ನಲ್ಲಿ ಮಂಗಳವಾರ ನಡೆದ ಘೋರ ಭಯೋತ್ಪಾದಕ ದಾಳಿಯನ್ನು ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯತಾವಾದಿ ಪೀಪಲ್ಸ್ ಫ್ರಂಟ್ (ಜೆಕೆಎನ್‌ಪಿಎಫ್) ಬಲವಾಗಿ ಖಂಡಿಸಿದೆ. ಅಮಾಯಕ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಈ ದಾಳಿಯಲ್ಲಿ 25ಕ್ಕೂ ಹೆಚ್ಚು ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ಅಧಿಕಾರಿಗಳ ಒಂದು ತಂಡ ಕಾಶ್ಮೀರಕ್ಕೆ ಪ್ರಯಾಣ ಬೆಳೆಸಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂತೆ ದೆಹಲಿಯ ರೆಸಿಡೆಂಟ್ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಘೋರ ಭಯೋತ್ಪಾದಕ ದಾಳಿಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಆಘಾತಕಾರಿ ಘಟನೆಯಲ್ಲಿ ಬಲಿಯಾದವರಲ್ಲಿ ಕನ್ನಡಿಗರೂ ಸೇರಿದ್ದಾರೆ. ವಿಷಯ ತಿಳಿದ ತಕ್ಷಣ, ನಾನು ತುರ್ತು ಸಭೆ ಕರೆದು ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಪರಿಸ್ಥಿತಿಯನ್ನು ಪರಿಶೀಲಿಸಿದೆ. ದೆಹಲಿಯಲ್ಲಿ ನಿವಾಸ ಆಯುಕ್ತರೊಂದಿಗೂ ಮಾತನಾಡಿದ್ದೇನೆ.

ನನ್ನ ನಿರ್ದೇಶನಗಳನ್ನು ಅನುಸರಿಸಿ, ಹಿರಿಯ ಅಧಿಕಾರಿಗಳ   ಮತ್ತು ಪೊಲೀಸ್ ಸಿಬ್ಬಂದಿಯ ಒಂದು ತಂಡವನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗಿದೆ. ಆಯುಕ್ತ ಚೇತನ್ ನೇತೃತ್ವದ ಕ್ರೀಡಾ ಇಲಾಖೆಯ ಸಾಹಸ ತಂಡವೂ ಕೂಡ ಪ್ರಯಾಣದಲ್ಲಿದೆ.

ಎಲ್ಲಾ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅಗತ್ಯವಿರುವ ಎಲ್ಲ ಬೆಂಬಲವನ್ನು ನೀಡಲಾಗುವುದು. ಭರವಸೆ ಇರಿಸಿ. ಕರ್ನಾಟಕ ಸರ್ಕಾರವು ಬಾಧಿತರೊಂದಿಗೆ ದೃಢವಾಗಿ ನಿಂತಿದೆ ಎಂದು ಸಿದ್ದರಾಯಯ್ಯ ಅವರು ಟ್ವೀಟ್ ಮಾಡಿ ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ