ಸಿಎಂಗೆ ಶೋಕಾಸ್ ನೋಟಿಸ್: ಕೇಂದ್ರದ ಹುನ್ನಾರವನ್ನು ಸಹಿಸಲ್ಲ ಎಂದ ಕಾಂಗ್ರೆಸ್

Sampriya

ಗುರುವಾರ, 1 ಆಗಸ್ಟ್ 2024 (16:03 IST)
ಬೆಂಗಳೂರು: ಮುಡಾ ಹಗರಣ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶೋಕಾಸ್ ನೋಟಿಸ್ ಜಾರಿ ಮಾಡಿರುವುದು ರಾಜಕೀಯ ಪ್ರೇರಿತವಾಗಿದ್ದು, ಈ ಮೂಲಕ ಬಿಜೆಪಿ ರಾಜಭವನವನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು, ಈ ಪ್ರಕರಣ ಸಂಬಂಧ ಹಿಂದೆ ಇಡಿ, ಸಿಬಿಐ ಮೂಲಕ ಪ್ರಯತ್ನಿಸಿದ್ದ ಬಿಜೆಪಿ ಇದೀಗ ರಾಜ್ಯಪಾಲರ ಕಚೇರಿಯನ್ನು ಬಳಸಿಕೊಳ್ಳುತ್ತಿದೆ. ಶೋಕಾಸ್ ನೋಟಿಸ್ ಬಗ್ಗೆ ಚರ್ಚಿಸಿದ್ದು, ಅದರ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಶೋಕಾಸ್ ನೋಟಿಸ್ ನ ಕಾನೂನು ಸ್ಥಿತಿ ಕುರಿತು ಬಹಿರಂಗಪಡಿಸುವುದಿಲ್ಲ. ಇದು ರಾಜಕೀಯ ಪ್ರೇರಿತವಾಗಿದೆ ಎಂದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಈ ಸಂಬಂಧ ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಪಾಲರ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡು ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸುವ, ಕಿರುಕುಳಕೊಡುವ ಕೆಟ್ಟ ಸಂಪ್ರದಾಯವನ್ನು ಕೇಂದ್ರದ ಬಿಜೆಪಿ ಸರ್ಕಾರ ಅನುಸರಿಸುತ್ತಿದೆ.

ರಾಜ್ಯಪಾಲರು ಪ್ರಶ್ನಾತೀತರಲ್ಲ. ಈಗಾಗಲೇ ಹಲವು ರಾಜ್ಯಗಳಲ್ಲಿ ಕೇಂದ್ರ ಸರ್ಕಾರದ ನಿರ್ದೇಶನದಂತೆ ರಾಜ್ಯಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುವುದನ್ನು ಗಮನಿಸಿದ್ದೇವೆ.

ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ‌‌ಅವರಿಗೂ ಇದೀಗ ನೋಟಿಸ್ ನೀಡುವ ಮೂಲಕ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸುವ ವ್ಯರ್ಥ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಮುನ್ನಡಿ ಇಟ್ಟಿದೆ. ಕೇಂದ್ರದ ಈ ಹುನ್ನಾರವನ್ನು ನಾವು ಸಹಿಸುವುದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ