ಸದ್ಯದಲ್ಲಿಯೇ ಬ್ರಿಗೇಡ್ ಬಿಕ್ಕಟ್ಟಿಗೆ ತೆರೆ: ಡಿ.ವಿ.ಸದಾನಂದಗೌಡ

ಭಾನುವಾರ, 15 ಜನವರಿ 2017 (11:24 IST)
ರಾಯಣ್ಣ ಬ್ರಿಗೇಡ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಘಟಕದಲ್ಲಿ ಉಂಟಾಗಿರುವ ಗೊಂದಲಗಳು ಶೀಘ್ರದಲ್ಲಿಯೇ ಪರಿಹಾರವಾಗಲಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ಪಾಳಯದಲ್ಲಿ ಗೊಂದಲಗಳು ಇರುವುದು ನಿಜ. ಗೊಂದಲ ಪರಿಹರಿಸಲು ಕೇಂದ್ರ ನಾಯಕರು ಸಮರ್ಥರಿದ್ದಾರೆ. ಸದ್ಯದಲ್ಲಿಯೇ ಎಲ್ಲ ಗೊಂದಲಗಳಿಗೂ ತೆರೆ ಎಳೆಯಲಾಗುತ್ತದೆ ಎಂದರು.
 
ರಾಜ್ಯ ಬಿಜೆಪಿ ಘಟಕದಲ್ಲಿ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ಸಮರ್ಥ ನಾಯಕರಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಶತಸಿದ್ಧ ಎಂದು ಡಿ.ವಿ.ಸದಾನಂದಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
 
ರಾಜ್ಯ ಬಿಜೆಪಿ ಪಾಳಯದಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತದೆ ಎಂಬ ಕಾರಣಕ್ಕಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಹೆಸರಿನ ಹೊಸ ಸಂಘಟನೆ ಹುಟ್ಟು ಹಾಕುವ ಮೂಲಕ ಪಕ್ಷದಲ್ಲಿ ತಮ್ಮ ಬಲ ಪ್ರದರ್ಶನ ಮಾಡಲು ಕೆ.ಎಸ್.ಈಶ್ವರಪ್ಪ ಮುಂದಾಗಿದ್ದರು.
 
ಪಕ್ಷದ ವೇದಿಕೆ ಬಿಟ್ಟು ಪ್ರತೇಕ ಸಂಘಟನೆ ಕಟ್ಟುವುದು ಸರಿಯಲ್ಲ. ಹೀಗಾಗಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ ಕೈಬಿಡಬೇಕು ರಾಮಲಾಲ್ ಅವರು ಈಶ್ವರಪ್ಪನವರಿಗೆ ತಾಕೀತು ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ