Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

Sampriya

ಭಾನುವಾರ, 8 ಜೂನ್ 2025 (22:33 IST)
ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ. 

ಸುಹಾಸ್‌ ಶೆಟ್ಟಿ ಹತ್ಯೆಯ ಹಿಂದೆ ನಿಷೇಧಿತ ಸಂಘಟನೆಗಳ ಕೈವಾಡಗಳ ಕುರಿತು ಆರೋಪಗಳು ಕೇಳಿಬಂದಿವೆ. ಜೊತೆಗೆ ವಿದೇಶಿ ಮೂಲಗಳಿಂದ ಹಣ ಬಳಸಿಕೊಳ್ಳಲಾಗಿದೆ ಅನ್ನೋ ಆರೋಪಗಳನ್ನು ಹತ್ಯೆಯಾದ ಸುಹಾಸ್ ಶೆಟ್ಟಿ ಕುಟುಂಬಸ್ಥರು ಹಾಗೂ ಹಿಂದೂ ಸಂಘಟನೆಗಳು ಆರೋಪ ಮಾಡಿತ್ತು. ಈ ಎಲ್ಲಾ ಆರೋಪಗಳ ಬಳಿಕ ಇದೀಗ ಕೇಂದ್ರ ಗೃಹ ಸಚಿವಾಲಯ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದೆ.

ಒಂದು ತಿಂಗಳ ಹಿಂದೆ ಮಂಗಳೂರಿನಲ್ಲಿ 42 ವರ್ಷದ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ಈ ಘಟನೆಯ ನಂತರ, ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಯಿತು. ವಿಶ್ವ ಹಿಂದೂ ಪರಿಷತ್ ಮತ್ತು ಇತರ ಹಿಂದೂ ಸಂಘಟನೆಗಳು ಮೇ 3 ರಂದು ಜಿಲ್ಲಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಪ್ರತಿಭಟನೆ ವೇಳೆ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಪಟ್ಟುಹಿಡಿದಿದ್ದವು.

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ರಾಜಕೀಯ ಮಟ್ಟದಲ್ಲಿಯೂ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ದಕ್ಷಿಣ ಕನ್ನಡದ ಬಿಜೆಪಿ ಸಂಸದ ಮತ್ತು ಪಕ್ಷದ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಬೇಕೆಂದು ಒತ್ತಾಯಿಸಿದ್ದರು. ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರು ಈ ಕೊಲೆಯಲ್ಲಿ ಭಾಗಿಯಾಗಿರಬಹುದು ಎಂದು ಅವರು ತಮ್ಮ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ