ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ

ಮಂಗಳವಾರ, 24 ಆಗಸ್ಟ್ 2021 (21:17 IST)
ಬೆಂಗಳೂರು ಆಗಸ್ಟ್ 24: ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳಿಗೆ ಸರಕಾರ ಸೂಕ್ತವಾಗಿ ಸ್ಪಂದಿಸಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಶ್ರೀ ಹಾಲಪ್ಪ ಆಚಾರ್ ಹೇಳಿದ್ದಾರೆ. 
 
ಇಂದು ಖನಿಜ ಭವನದಲ್ಲಿ ಅಂಗನವಾಡಿ ಕಾರ್ಯಕರ್ತೆ ಯರ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಯರಿಗೆ ಈ ಭರವಸೆಯನ್ನು ನೀಡಲಾಯಿತು. ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಯರು ಬಹಳಷ್ಟು ಒಳ್ಳೆಯ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಹಲವಾರು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹಲವಾರು ಬಾರಿ ಪ್ರತಿಭಟನೆ ಹಾಗೂ ಹೋರಾಟ ನಡೆಸಿದ್ದಾರೆ. ಆದರೂ ಕೂಡಾ ಕೆಲವೊಂದು ತಾಂತ್ರಿಕ ಹಾಗು ಆಡಳಿತಾತ್ಮಕ ವಿಷಯಗಳಿಂದಾಗಿ ಕೆಲವು ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗಿಲ್ಲ. ಈ ಎಲ್ಲಾ ಬೇಡಿಕೆಗಳ ಬಗ್ಗೆ ಇಂದು ಅಧಿಕಾರಿಗಳ ಸಮ್ಮುಖದಲ್ಲಿ ವಿಸ್ತೃತ ಚರ್ಚೆ ನಡೆಸಲಾಗಿದೆ. ಅಲ್ಲದೆ, ಹಲವಾರು ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
 
ಈ ಸಭೆಯಲ್ಲಿ ಇಲಾಖೆಯ ನಿರ್ದೇಶಕರಾದ ಶ್ರೀಮತಿ ಅನುರಾಧ, ಜಂಟಿ ನಿರ್ದೇಶಕರಾದ ಶ್ರೀಮತಿ ಉಷಾ, ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಎಸ್. ವರಲಕ್ಷ್ಮಿ ಹಾಗೂ ಇತರೆ ಸದಸ್ಯರು ಭಾಗವಹಿಸಿದ್ದರು. 
 
ಇದೇ ವೇಳೆ ಮರಳು ನೀತಿಯನ್ನು ಸರಳೀಕರಣಗೊಳಿಸುವ ಕುರಿತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆಯನ್ನು ಜರುಗಿಸಲಾಯಿತು, ಸಭೆಯಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀ ಪಂಕಜ್ ಕುಮಾರ್ ಪಾಂಡೆ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ