ನಾಳೆ ಗಣಿನಾಡಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ

ಗುರುವಾರ, 26 ಏಪ್ರಿಲ್ 2018 (17:44 IST)
ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ನಡೆಸುತ್ತಿರುವ ಕರುನಾಡ ಯಾತ್ರೆ ಭಾಗವಾಗಿ  ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಗಣಿನಗರಿ ಬಳ್ಳಾರಿಗೆ ನಾಳೆ ಭೇಟಿ ನೀಡಲಿದ್ದಾರೆ.
ಈ ಕುರಿತು ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್.​ ಯಡಿಯೂರಪ್ಪ ತಮ್ಮ ಟ್ವಿಟರ್​ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದು, ಅಮಿತ್​ ಶಾ ಅವರು  ಬೆಳಗ್ಗೆ 10. 30 ಕ್ಕೆ ನಗರದ ಅಧಿದೇವತೆ ಕನಕದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.
 
ನಂತರ ಕನಕದುರ್ಗಮ್ಮ ದೇವಸ್ಥಾನದಿಂದ ಬೆಂಗಳೂರು ರಸ್ತೆವರೆಗೆ ನಡೆಯುವ ರೋಡ್​ ಶೋನಲ್ಲಿ ಭಾಗಿಯಾಗಿ ಬಿಜೆಪಿ ಪರ ಮತ ಯಾಚನೆ ನಡೆಸಲಿದ್ದಾರೆ. ಈ ಸಂದರ್ಭ ರಾಜ್ಯಾಧ್ಯಕ್ಷ ಬಿ. ಎಸ್.​ ಯಡಿಯೂರಪ್ಪ, ಜಿಲ್ಲಾ ಬಿಜೆಪಿ ಮುಖಂಡರು, ನಗರ ಕ್ಷೇತ್ರದ ಅಭ್ಯರ್ಥಿ ಜಿ. ಸೋಮಶೇಖರ ರೆಡ್ಡಿ, ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಸಣ್ಣಫಕೀರಪ್ಪ ಸಾಥ್​ ನೀಡಲಿದ್ದಾರೆ.
 
ಆ ನಂತರ ಅಮಿತ್​ ಶಾ ಮತ್ತು ಬಿಎಸ್​ವೈ ಅವರು ಕೊಪ್ಪಳದ ಗವಿಮಠಕ್ಕೆ ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದು ಜಿಲ್ಲೆಯ ಕುಕನೂರಿನಲ್ಲಿ ಮಧ್ಯಾಹ್ನ 4 ಗಂಟೆಗೆ ನಡೆಯುವ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ