ನಳಿನ್ ಕುಮಾರ್ ಕಟೀಲ್ ಹೇಳಿಕೆ ಸಮರ್ಥಿಸಿಕೊಂಡ ಕೆ.ಎಸ್.ಈಶ್ವರಪ್ಪ

ಬುಧವಾರ, 4 ಜನವರಿ 2017 (11:45 IST)
ಸಂಸದ ನಳಿನ್ ಕುಮಾರ್ ಕಟೀಲ್ ನೀಡಿರುವ ಹೇಳಿಕೆ ತಪ್ಪಿರಬಹುದು. ಆದರೆ, ಅವರ ಹೇಳಿಕೆ ಹಿಂದಿರುವ ಭಾವನೆ ಅರ್ಥ ಮಾಡಿಕೊಳ್ಳಬೇಕು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ. 
 
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಮೇಲಿಂದ ಮೇಲೆ ಕೊಲೆ, ದರೋಡೆ ಹಾಗೂ ಸುಲಿಗೆಯಂತಹ ಪ್ರಕರಣಗಳು ನಡೆಯುತ್ತಲೇ ಇವೆ. ಆದರೆ, ಗೃಹ ಇಲಾಖೆ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ. ಕರ್ನಾಟಕ ರಾಜ್ಯ ಕೊಲೆಗಡುಕರು, ದರೋಡೆಕೋರರು ಹಾಗೂ ಸಲಿಗೆಕೋರರ ನಾಡಾಗಿ ಪರಿಣಮಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  
 
ರಾಜ್ಯ ಸರಕಾರ ಕೇವಲ ಅಲ್ಪಸಂಖ್ಯಾತರ ಸ್ಥಿತಿಗತಿ ಅಧ್ಯಯನಕ್ಕೆ ಸಮಿತಿ ರಚಿಸಿರುವುದು ತಪ್ಪು. ಹಿಂದುಳಿದವರು ಮತ್ತು ದಲಿತರು ಹಾಗೂ ಬಡವರ ಸ್ಥಿತಿಗತಿಗಳ ಕುರಿತು ಅಧ್ಯಯನಕ್ಕೂ ಸಮಿತಿ ರಚಿಸಲಿ ಎಂದು ಒತ್ತಾಯಿಸಿದ್ದರು. 
 
ಪಜೀರ್‌ನ ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳ ಪತ್ತೆಗೆ ಆಗ್ರಹಿಸಿ ಭಾನುವಾರ ಕೊಣಾಜೆ ಪೊಲೀಸ್ ಠಾಣೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್, ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳಲ್ಲಿ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ