ಅಶಿಸ್ತಿನಿಂದ ವರ್ತಿಸಿದರೆ ಕಠಿಣ ಕ್ರಮ: ಈಶ್ವರಪ್ಪಗೆ ಯಡಿಯೂರಪ್ಪ ಪರೋಕ್ಷ ಎಚ್ಚರಿಕೆ
ಶನಿವಾರ, 2 ಜುಲೈ 2016 (13:32 IST)
ಬಿಜೆಪಿ ಪಕ್ಷದಲ್ಲಿ ಯಾರು ಎಷ್ಟೇ ದೊಡ್ಡ ನಾಯಕರಾಗಿದ್ದರೂ ಪಕ್ಷದ ನೀತಿಗಳನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರೋಕ್ಷವಾಗಿ ಕೆ.ಎಸ್.ಈಶ್ವರಪ್ಪ ವಿರುದ್ಧ ಗುಡುಗಿದ್ದಾರೆ.
ಯಾವುದೇ ವಿಷಯದ ಬಗ್ಗೆ ಅಸಮಾಧಾನವಿದ್ದಲ್ಲಿ ಪಕ್ಷದ ವೇದಿಕೆಯಲ್ಲಿ ಬಂದು ಚರ್ಚಿಸಿ. ಅದನ್ನು ಬಿಟ್ಟು ಬಹಿರಂಗವಾಗಿ ಹೇಳಿಕೆ ನೀಡುವುದು ಪಕ್ಷ ವಿರೋಧಿಯಾಗುತ್ತದೆ. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವವರು ಯಾವ ಹುದ್ದೆಯಲ್ಲಿದ್ದರೂ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪದಾಧಿಕಾರಿಗಳ ನೇಮಕ ಕುರಿತಂತೆ ಕೋರ್ ಕಮಿಟಿಯಲ್ಲಿ ಚರ್ಚಿಸದೆ ನೇಮಕ ಮಾಡಲಾಗಿದೆ. ಇದು ಯಡಿಯೂರಪ್ಪನವರ ಸರ್ವಾಧಿಕಾರಿ ಧೋರಣೆಯಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಈಶ್ವರಪ್ಪ ಬಹಿರಂಗವಾಗಿ ಟೀಕಿಸಿದ್ದರು.
ಇಂದು ಯಡಿಯೂರಪ್ಪ ಕರೆದ ಸಭೆಗೆ ಗೈರುಹಾಜರಾಗಿರುವುದು ಕೂಡಾ ಯಡಿಯೂರಪ್ಪನವರಿಗೆ ಈಶ್ವರಪ್ಪನವರ ವಿರುದ್ಧ ಆಕ್ರೋಶ ಮೂಡಿಸಿದೆ.
ಈಶ್ವರಪ್ಪ ಮತ್ತು ಅವರ ಬೆಂಬಲಿಗರು ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ, ಪದಾಧಿಕಾರಿಗಳ ನೇಮಕಾತಿ ಪಟ್ಟಿಯನ್ನು ರದ್ದುಗೊಳಿಸುವಂತೆ ಒತ್ತಡ ಹೇರಲಿದ್ದಾರೆ ಎನ್ನುವ ವರದಿಗಳು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರಿಗೆ ಅಸಮಾಧಾನ ಮೂಡಿಸಿವೆ ಎನ್ನಲಾಗಿದೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.