ಕೆಲವೊಂದು ತಪ್ಪುಗಳನ್ನು ಎಸಗಿದ್ದರೂ ಪಾಠ ಕಲಿತಿದ್ದೇವೆ: ಪ್ರಧಾನಿ

ಶುಕ್ರವಾರ, 17 ಜನವರಿ 2014 (15:09 IST)
PR
ಯುಪಿಎ ಸರಕಾರದ 10 ವರ್ಷಗಳ ಅವಧಿಯಲ್ಲಿ ನಾವು ಕೆಲವೊಂದು ತಪ್ಪುಗಳನ್ನು ಎಸಗಿದ್ದೇವೆ. ಆದರೆ, ತಪ್ಪುಗಳಿಂದ ಪಾಠವನ್ನು ಕಲಿತಿದ್ದೇವೆ. ಇತ್ತೀಚೆಗೆ ನಡೆದ ಪಂಚರಾಜ್ಯಗಳ ವಿಧಾನಸಭೆಯ ಸೋಲಿನಿಂದ ಉತ್ಸಾಹ ಕಳೆಗುಂದಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

ಕಲ್ಲಿದ್ದಲು ಮತ್ತು 2ಜಿ ತರಂಗಾಂತರ ಹಂಚಿಕೆಯಲ್ಲಿ ಯಾವುದೇ ತಪ್ಪುಗಳನ್ನು ಎಸಗಿಲ್ಲ. ಎನ್‌ಡಿಎ ಸರಕಾರ ರೂಪಿಸಿದ ನಿಯಮಗಳನ್ನು ಮಾತ್ರ ಪಾಲಿಸಿದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವಲ್ಲಿ ವಿಫಲವಾಗಿದ್ದೇವೆ. ಆದಾಗ್ಯೂ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿಲ್ಲ. ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕೆಲ ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ್ದೇವೆ. ಆದರೆ, ಸಾಧನೆ ಕುರಿತಂತೆ ವಿಪಕ್ಷಗಳಿಗೆ ಹೋಲಿಸಿದಲ್ಲಿ ಕಾಂಗ್ರೆಸ್ ಪಕ್ಷ ಉತ್ತಮವಾಗಿ ಕಾರ್ಯನಿರ್ವಹಿಸಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ..

ವೆಬ್ದುನಿಯಾವನ್ನು ಓದಿ