ಬಿಜೆಪಿ ನಾಯಕರು ಕೇವಲ ಮಾತಿನ ಶೂರರು: ಸೋನಿಯಾ ಗಾಂಧಿ

ಭಾನುವಾರ, 30 ಮಾರ್ಚ್ 2014 (16:44 IST)
PTI
ಕೇವಲ ದೊಡ್ಡ ಮಾತುಗಳಿಂದಲೇ ದೇಶ ಕಟ್ಟಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ.

ಭಾನುವಾರ ಅಸ್ಸಾಂ ಲಖಿಮ್ ಪುರದಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಸೋನಿಯಾ ಗಾಂಧಿ ಅವರು, ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತು ಬಿಜೆಪಿ ಪಕ್ಷದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶ ಸುತ್ತಿ ದೊಡ್ಡ ದೊಡ್ಡ ಮಾತುಗಳನ್ನಾಡುತ್ತಿರುವ ಬಿಜೆಪಿ ನಾಯಕರು ತಮ್ಮ ಅಧಿಕಾರಾವಧಿಯಲ್ಲಿ ಮಾಡಿದ್ದೇನು ಇಲ್ಲ. ಕೇವಲ ದೊಡ್ಡ ದೊಡ್ಡ ಮಾತುಗಳಿಂದ ದೇಶ ಕಟ್ಟಲು ಸಾಧ್ಯವಿಲ್ಲ ಎಂದು ಸೋನಿಯಾ ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ದೊಡ್ಡ ವ್ಯತ್ಯಾಸವಿದ್ದು, ಬಿಜೆಪಿ ಕೇವಲ ಮಾತಿನಿಂದಲೇ ಸಾಧನೆ ಮಾಡಿದ್ದೇವೆ ಎಂದು ಬಾಯಿಬಡಿದುಕೊಳ್ಳತ್ತದೆ. ಆದರೆ ಕಾಂಗ್ರೆಸ್ ಪಕ್ಷ ಮೌನವಾಗಿಯೇ ಅಭಿವೃದ್ಧಿ ಕೆಲಸಗಳನ್ನು ಮಾಡಿದೆ. 2009ರ ಚುನಾವಣಾ ಸಂದರ್ಭದಲ್ಲಿ ದೇಶದ ಜನತೆಗೆ ನೀಡಿದ್ದ ಎಲ್ಲ ಭರವಸೆಗಳನ್ನು ಕಾಂಗ್ರೆಸ್ ಪಕ್ಷ ಬಹುತೇಕ ಈಡೇರಿಸಿದೆ. 2014ರ ಚುನಾವಣೆಯಲ್ಲಿಯೂ ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತೇವೆ.

ಸುಖಾ ಸುಮ್ಮನೆ ನಾವು ಯಾವುದೇ ರೀತಿಯ ಆಶ್ವಾಸನೆಗಳನ್ನು ನೀಡುವುದಿಲ್ಲ. ನಾವು ನೀಡಿದ ಭರವಸೆಗಳನ್ನು ಖಂಡಿತವಾಗಿಯೂ ಪೂರ್ಣಗೊಳಿಸುತ್ತೇವೆ. ದೇಶದ ಪ್ರತಿಯೊಬ್ಬ ಪ್ರಜೆಯ ಕೈಗೆ ಶಕ್ತಿ ನೀಡುವ ಮೂಲಕವಾಗಿ ಪ್ರತಿ ನಾಗರೀಕನ ಪ್ರಗತಿ ಸಾಧಿಸುವುದು ಕಾಂಗ್ರೆಸ್ ಪಕ್ಷದ ಮುಖ್ಯೊದ್ದೇಶವಾಗಿದೆ ಎಂದು ಸೋನಿಯಾ ಗಾಂಧಿ ಹೇಳಿದರು.

ಒಟ್ಟಾರೆ ಅಸ್ಸಾಂನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪರೋಕ್ಷವಾಗಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿಕೊಂಡು ಟೀಕಾ ಪ್ರಹಾರ ನಡೆಸಿದರು.

ವೆಬ್ದುನಿಯಾವನ್ನು ಓದಿ