ಬಿಜೆಪಿ ಅಧಿಕಾರಕ್ಕೇರುವ ಹಗಲು ಗನಸು ಕಾಣುತ್ತಿದೆ: ಸೋನಿಯಾ ಲೇವಡಿ

ಶುಕ್ರವಾರ, 15 ನವೆಂಬರ್ 2013 (17:21 IST)
PTI
ಬಿಜೆಪಿ ಪಕ್ಷ ಮಧ್ಯಪ್ರದೇಶದಲ್ಲಿ ಮತ್ತೆ ಅಧಿಕಾರಕ್ಕೇರುವ ಕುರಿತಂತೆ ಹಗಲುಗನಸು ಕಾಣುತ್ತಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ನೇತೃತ್ವದ ಸರಕಾರ ಕೇವಲ ಪೊಳ್ಳು ಭರವಸೆಗಳನ್ನು ಮಾತ್ರ ನೀಡುತ್ತದೆ. ಕೇಂದ್ರದ ಜನಪರ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ವಿಫಲವಾಗಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುವ ಮುನ್ನ ಜನತೆಗೆ ಹಲವಾರು ಆಶ್ವಾಸನೆಗಳನ್ನು ನೀಡಿತ್ತು. ಕಳೆದ ಐದು ವರ್ಷಗಳ ಅವಧಿಯಲ್ಲಿ ಅಶ್ವಾಸನೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಕೇವಲ ಅಧಿಕಾರಕ್ಕೇರುವ ಹಗಲು ಗನಸು ಕಾಣುತ್ತಿದೆ ಎಂದು ಕಿಡಿಕಾರಿದರು.

ಕೇಂದ್ರದಿಂದ ಕಳುಹಿಸಲಾದ ಹಣ ಎಲ್ಲಿಗೆ ಹೋಗುತ್ತಿದೆ? ನಿಮ್ಮ ಸಂಪುಟದ 13 ಸಚಿವರು ಭ್ರಷ್ಟಾಚಾರ ಪ್ರಕರಣಗಳಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅಂತಹ ಭ್ರಷ್ಟ ಸಚಿವರ ವಿರುದ್ಧ ಯಾವ ಕ್ರಮ ತೆಗೆದುಕೊಂಡಿದ್ದೀರಾ? ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್‌ಗೆ ನೇರ ಪ್ರಶ್ನೆಗಳ ಸರಮಾಲೆ ಎಸೆದರು.

ಚತ್ತೀಸ್‌ಗಢ್ ಮತ್ತು ಮಧ್ಯಪ್ರದೇಶದಲ್ಲಿ ಭ್ರಷ್ಟಾಚಾರ ಹೆಚ್ಚಳವಾಗಿದೆ. ಬಡವರಿಗೆ ಶುದ್ದವಾದ ಕುಡಿಯುವ ನೀರು, ಮೂಲಸೌಕರ್ಯ ದೊರೆಯುತ್ತಿಲ್ಲ. ರಾಜ್ಯದಲ್ಲಿ 417 ಲಾಕಪ್‌ ಡೆತ್ ಸಂಭವಿಸಿವೆ. ನ್ಯಾಯಾಂಗ ಬಂಧನದಲ್ಲಿದ್ದ 4285 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಸರಕಾರಿ ವೈದ್ಯರ ಕೊರತೆಯಿರುವುದರಿಂದ ಬಡವರಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಒಂದು ವೇಳೆ ಬಿಜೆಪಿ ಪಕ್ಷದವರು ಕೇವಲ ದೊಡ್ಡ ದೊಡ್ಡ ಭಾಷಣಗಳ ಮೂಲಕ ಜನರ ಹೃದಯಗಳನ್ನು ಗೆಲ್ಲುತ್ತೇವೆ ಎಂದು ಭಾವಿಸಿದ್ದರೆ ಅದು ಶುದ್ದ ತಪ್ಪು ಎಂದು ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ