ಜವಾಹರ್ ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ನಡೆದ ಘಟನೆಗೆ ಲಷ್ಕರ್-ಎ-ತೊಯಿಬಾ ಮುಖ್ಯಸ್ಥ ಹಫೀಜ್ ಸಯೀದ್ ಬೆಂಬಲ ಸೂಚಿಸಿದ್ದರು ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ನೀಡಿದ ಹೇಳಿಕೆ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಪಕ್ಷ, ಎಬಿವಿಪಿ ಬಿಜೆಪಿಯ ವಿದ್ಯಾರ್ಥಿ ಘಟಕ ವಿಭಾಗವಾಗಿದ್ದರಿಂದ ಅದನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ತಿರುಗೇಟು ನೀಡಿದೆ.
ಕೇಂದ್ರ ಗೃಹ ಖಾತೆ ಸಚಿವರು ನೀಡಿದ ಹೇಳಿಕೆ ಹಾಸ್ಯಾಸ್ಪದವಾಗಿದೆ. ಗಂಭೀರವಾದ ವಿಷಯವನ್ನು ಲಘುವಾದ ದಾಟಿಯಲ್ಲಿ ಹೇಳಿದ್ದಾರೆ. ಎಬಿವಿಪಿಯನ್ನು ರಕ್ಷಿಸಲು ಕೇಂದ್ರ ಸರಕಾರ ಪ್ರಯತ್ನಿಸುತ್ತಿದೆ. ಕೆಲ ವಿಡಿಯೋಗಳ ಪ್ರಕಾರ ರಾಷ್ಟ್ರವಿರೋಧಿ ಘೋಷಣೆಗಳನ್ನು ಕೂಗಿದವರು ಎಬಿವಿಪಿ ವಿದ್ಯಾರ್ಥಿಗಳು ಎನ್ನುವುದು ಬಹಿರಂಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ಸಂದೀಪ್ ದೀಕ್ಷಿತ್ ಹೇಳಿದ್ದಾರೆ.