ಸಿಬಿಐ ಹೆಗಲಿಗೆ ಕರೂರು ಕಾಲ್ತುಳಿತ ಪ್ರಕರಣ: ವಿಜಯ್‌ ಮನವಿಗೆ ಸುಪ್ರೀಂ ಕೋರ್ಟ್ ಅಸ್ತು

Sampriya

ಸೋಮವಾರ, 13 ಅಕ್ಟೋಬರ್ 2025 (14:14 IST)
ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ ತಮಿಳುನಾಡಿನ ಕರೂರು ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಸಿಬಿಐ ಹೆಗಲಿಗೆ ವಹಿಸಿದೆ.

ತಮಿಳ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ, ನಟ ವಿಜಯ ಅವರ ರಾಜಕೀಯ ಸಮಾವೇಶದಲ್ಲಿ ಸೆಪ್ಟೆಂಬರ್ 27ರಂದು ನಡೆದ ಕಾಲ್ತುಳಿತದಿಂದಾಗಿ 41 ಮಂದಿ ಮೃತಪಟ್ಟಿದ್ದರು.  ಹಲವು ಮಂದಿ ಗಾಯಗೊಂಡಿದ್ದರು.

ಪ್ರಕರಣ ಸಂಬಂಧ ತನಿಖೆ ನಡೆಸಲು ವಿಶೇಷ ತನಿಖಾ ದಳ (ಎಸ್‌ಐಟಿ) ರಚಿಸಿ ಮದ್ರಾಸ್ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ವಿಜಯ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ನ್ಯಾಯಮೂರ್ತಿಗಳಾದ ಜೆ.ಕೆ ಮಹೇಶ್ವರಿ ಹಾಗೂ ಎನ್‌.ವಿ ಅಂಜಾರಿಯಾ ಅವರಿದ್ದ ಸುಪ್ರೀಂ ಕೋರ್ಟ್‌ನ ಪೀಠ ಸೋಮವಾರ ತೀರ್ಪು ಪ್ರಕಟಿಸಿದ್ದು, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತಲ್ಲದೆ, ನಿವೃತ್ತ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದ ತ್ರಿಸದಸ್ಯ ಪೀಠ ತನಿಖೆಯ ಮೇಲ್ವಿಚಾರಣೆ ನಡೆಸಲಿದೆ ಎಂದು ಹೇಳಿತು.

ತಮಿಳುನಾಡು ಕೇಡರ್‌ನವರಾದರೂ, ತಮಿಳುನಾಡು ಮೂಲದವರಲ್ಲದ ಇಬ್ಬರು ಐಪಿಎಸ್ ಅಧಿಕಾರಿಗಳು ಸಮಿತಿಯ ಭಾಗವಾಗಲಿದ್ದಾರೆ. ಐಜಿಪಿ ದರ್ಜೆಗಿಂತ ಕೆಳಗಿನವರಲ್ಲದವರನ್ನು ರಸ್ತೋಗಿಯವರು ಆಯ್ಕೆ ಮಾಡಿಕೊಳ್ಳಬಹುದು ಎಂದು ಕೋರ್ಟ್ ಹೇಳಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ