ನವದೆಹಲಿ: ಮತಗಳ್ಳತನ ಆರೋಪಿಸಿ ಚುನಾವಣಾ ಆಯೋಗದ ಕಚೇರಿಗೆ ಅನುಮತಿಯಿಲ್ಲದೇ ಮೆರವಣಿಗೆ ಹೊರಟಿದ್ದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಫುಲ್ ಗರಂ ಆಗಿ ಪ್ರತಿಕ್ರಿಯಿಸಿದ್ದಾರೆ.
ಮತಪಟ್ಟಿ ಪರಿಷ್ಕರಣೆ ವಿರೋಧಿಸಿ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ಇಂಡಿಯಾ ಒಕ್ಕೂಟದ ಸಂಸದರು ಸಂಸತ್ ಭವನದಿಂದ ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಜಾಥಾ ಹೊರಟಿದ್ದರು. ಆದರೆ ಅನುಮತಿ ಪಡೆದಿಲ್ಲ ಎಂಬ ಕಾರಣಕ್ಕೆ ಪೊಲೀಸರು ಎಲ್ಲರನ್ನು ವಶಕ್ಕೆ ಪಡೆದಿದ್ದಾರೆ.
ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಸೇರಿದಂತೆ 30 ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ಆಕ್ರೋಶಭರಿತರಾಗಿ ಮಾತನಾಡಿದ್ದಾರೆ.
ಹೇಡಿ ನರೇಂದ್ರ ಮೋದಿ ಸರ್ಕಾರ ಚುನಾವಣಾ ಆಯೋಗದ ಜೊತೆ ಹೊಂದಾಣಿಕೆ ಮಾಡಿಕೊಂಡು ಬದ್ದತೆ ಕಳೆದುಕೊಂಡಿದೆ. ಬೆಂಗಳೂರಿನಲ್ಲಿ ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿಯವರು ದೇಶದ ಗಮನ ಸೆಳೆದ ಮೇಲೆ ಅನ್ಯಾಯ ಸರಿಪಡಿಸುವುದು ಬಿಟ್ಟು ಬಿಜೆಪಿಯವರು ಪೊಲೀಸರನ್ನು ಛೂ ಬಿಟ್ಟು ಪ್ರಶ್ನೆ ಮಾಡುತ್ತಿರುವವರನ್ನು ವಶಕ್ಕೆ ಪಡೆದಿದೆ.
ಇಂದು ಬಿಹಾರ ಚುನಾವಣೆಯಲ್ಲಿ ಮತಪರಿಷ್ಕರಣೆ ವಿರೋಧಿಸಿ ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಗಾಂಧಿ ಸೇರಿದಂತೆ ಸಂಸದರು ಜಾಥಾ ಹೊರಟಿದ್ದಾಗ ಅವರನ್ನು ವಶಕ್ಕೆ ಪಡೆಯಲಾಯಿತು. ಚುನಾವಣಾ ಆಯೋಗ ನಿರ್ಭೀತವಾಗಿ ತನ್ನ ಕೆಲಸ ಮಾಡುವುದು ಬಿಟ್ಟು, ಕೇಂದ್ರ ಸರ್ಕಾರ ವಿಪಕ್ಷಗಳ ಸದ್ದಡಗಿಸುವ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.