ದೇಶದ ರೈತರ ಸಾವಿಗೆ ಡ್ರಗ್ಸ್, ಪ್ರೇಮ ಪ್ರಕರಣ, ವರದಕ್ಷಿಣೆ ಕಾರಣವೇ ಹೊರತು ಸಾಲವಲ್ಲ ಎಂದು ಕೇಂದ್ರ ಕೃಷಿ ಖಾತೆ ಸಚಿವ ರಾಧಾ ಮೋಹನ್ ಸಿಂಗ್ ನೀಡಿದ ಹೇಳಿಕೆಗೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಪ್ರಮೋದ್ ತಿವಾರಿ ಒತ್ತಾಯಿಸಿದ್ದಾರೆ.
ಕಳೆದ ವರ್ಷ ಮಳೆಯ ಕೊರತೆಯಿಂದಾಗಿ ರೈತರು ಸಂಕಷ್ಟದಲ್ಲಿದ್ದರೂ ಕೇಂದ್ರ ಸರಕಾರ ಯಾವುದೇ ನೆರವು ನೀಡಿಲ್ಲ. ಬಡ ರೈತರ ಮಕ್ಕಳಿಗೆ ಶಿಕ್ಷಣ ಮುಂದುವರಿಸಲು ಸಾಧ್ಯವಾಗುತ್ತಿಲ್ಲ. ರೈತರು ಜೀವನ ಸಾಗಿಸಲು ಕಷ್ಟವಾಗಿ ಆತ್ಮಹತ್ಯೆಗೆ ಮೊರೆಹೋಗುತ್ತಿದ್ದಾರೆ. ಇಂತಹ ಕಠಿಣ ಪರಿಸ್ಥಿತಿಯಲ್ಲಿ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ನೀಡಿರುವ ಹೇಳಿಕೆ ಬಿಜೆಪಿ ಸರಕಾರಕ್ಕೆ ನಾಚಿಕೆ ತರುವ ಸಂಗತಿ ಎಂದರು.