ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಬ್ಬಿಸಿರುವ ಮತ ಕಳ್ಳತನ ಆರೋಪ ತೀವ್ರ ಸ್ವರೂಪ ಪಡೆದಿದೆ. ಈ ನಿಟ್ಟಿನಲ್ಲಿ ಇಂಡಿಯಾ ಮೈತ್ರಿಕೂಟ ಪ್ರತಿಭಟನೆ ತೀವ್ರಗೊಳಿಸಿದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಲು ಚುನಾವಣಾ ಆರೋಗ ಸಜ್ಜಾಗಿದೆ.
ಚುನಾವಣಾ ಆಯೋಗವು ಇಂದು ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಲು ಮುಂದಾಗಿದೆ.
ಚುನಾವಣಾ ವೇಳಾಪಟ್ಟಿ ಪ್ರಕಟಗೊಳ್ಳುವ ಮುನ್ನವೇ ಚುನಾವಣಾ ಆಯೋಗವು ಸಂಪ್ರದಾಯವನ್ನು ಮುರಿದು ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ.
ಆಯೋಗ ನಡೆಯುವ ಸುದ್ದಿಗೋಷ್ಠಿಯ ವಿಷಯ ಯಾವುದು ಎನ್ನುವುದನ್ನು ಆಯೋಗ ಸ್ಪಷ್ಟಪಡಿಸಿಲ್ಲ. ಆದರೆ, ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಆಯೋಗದ ವಿರುದ್ಧ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು ಮಾಡಿರುವ ಸರಣಿ ಆರೋಪಗಳಿಗೆ ಸ್ಪಷ್ಟನೆ ನೀಡುವುದು ಸುದ್ದಿಗೋಷ್ಠಿಯ ವಿಷಯವಾಗಿರಬಹುದು ಎನ್ನಲಾಗಿದೆ.
ಮಹಾರಾಷ್ಟ್ರ, ಕರ್ನಾಟಕ ಮತ್ತು ಹರಿಯಾಣದಲ್ಲಿ ಭಾರಿ ಮತ ಕಳ್ಳತನ ನಡೆಸಿ ಬಿಜೆಪಿ ಜಯ ಗಳಿಸಿದೆ. ಮತದಾರರ ಪಟ್ಟಿಯಲ್ಲಿ ಅಕ್ರಮ ಎಸಗಲು ಚುನಾವಣಾ ಆಯೋಗವು ಬಿಜೆಪಿಯೊಂದಿಗೆ ಕೈಜೋಡಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಆಯೋಗದ ವಿರುದ್ಧ ಗಂಭೀರ ಆರೋಪ ಮಾಡಿದ್ದರು.
ಈ ನಡುವೆ ಬಿಹಾರದಲ್ಲಿ ಎಸ್ಐಆರ್ ವೇಳೆ ಪಟ್ಟಿಯಿಂದ ಕೈಬಿಟ್ಟಿರುವ 65 ಲಕ್ಷ ಮತದಾರರ ಹೆಸರು ಮತ್ತು ವಿವರಗಳನ್ನು ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಗುರುವಾರ ನಿರ್ದೇಶನ ನೀಡಿತ್ತು.