ಸಿಎಂ ಆಗಿರುವುದು ಕುಮಾರಸ್ವಾಮಿಗೆ ಸಹಿಸಲಾಗುತ್ತಿಲ್ಲ: ಸಿದ್ದರಾಮಯ್ಯ

ಶನಿವಾರ, 27 ಫೆಬ್ರವರಿ 2016 (15:49 IST)
ನಾನು ಮುಖ್ಯಮಂತ್ರಿಯಾಗಿರುವುದಕ್ಕೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ನಾನು ಬೆಳ್ಳಿ ತಟ್ಟೆಯಲ್ಲಿ ಊಟ ಮಾಡುತ್ತಾರೆ ಎನ್ನುವ ಕುಮಾರಸ್ವಾಮಿ ಆರೋಪದಲ್ಲಿ ಸತ್ಯಾಂಶವಿಲ್ಲ.  ಬೆಳ್ಳಿ ತಟ್ಟೆಯಲ್ಲಿ ನಾನು ಊಟ ಮಾಡುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. 
 
ಭ್ರಷ್ಟಾಚಾರರಹಿತ ಸರಕಾರ ಅಡಳಿತ ನೀಡುತ್ತಿರುವುದು ಕುಮಾರಸ್ವಾಮಿಯವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರಕಾರಕ್ಕೆ ಮಸಿ ಬಳೆಯುವ ಉದ್ದೇಶದಿಂದ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ವಾಚ್ ಕಳೆದುಕೊಂಡ ಸುಧಾಕರ್ ಶೆಟ್ಟಿಯವರೇ ಖುದ್ದಾಗಿ ಸಿಎಂ ಬಳಿ ಇರುವ ವಾಚ್ ನನ್ನದಲ್ಲ ಎಂದು ಹೇಳಿಕೆ ನೀಡಿದ್ದಾರೆ. ಆದಾಗ್ಯೂ ಕುಮಾರಸ್ವಾಮಿ ಮನಬಂದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
 
ಹಿಂದೆ ವೀರಪ್ಪ ಮೊಯ್ಲಿ ಮತ್ತು ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ಕೂಡಾ ಇಂತಹ ಹೇಳಿಕೆಗಳನ್ನು ನೀಡಿದ್ದರು. ಮುಖ್ಯಮಂತ್ರಿ ಸ್ಥಾನದಿಂದ ನನ್ನನ್ನು ಕೆಳಗಿಳಿಸಬೇಕು ಎನ್ನುವ ಏಕೈಕ ಸಂಚು ಕುಮಾರಸ್ವಾಮಿ ರೂಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ. 

ವೆಬ್ದುನಿಯಾವನ್ನು ಓದಿ