ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಬೇಸರಗೊಂಡು ವಿದ್ಯಾರ್ಥಿನಿ ಆತ್ಮಹತ್ಯೆ

ಭಾನುವಾರ, 15 ಅಕ್ಟೋಬರ್ 2017 (14:43 IST)
ಕೋಲ್ಕತ್ತಾ: ಪೋಷಕರು ತನ್ನ ಮೊಬೈಲ್ ಕಿತ್ತುಕೊಂಡರು ಎನ್ನುವ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.

11ನೇ ತರಗತಿ ಓದುತ್ತಿದ್ದ ಜ್ಯೋತಿ ಷಾ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಸಾಮಾಜಿಕ ಜಾಲತಾಣದಲ್ಲಿ ಜ್ಯೋತಿ ಹೆಚ್ಚು ಹಚ್ಚಿಕೊಂಡಿದ್ದರಿಂದ, ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ನೀಡುತ್ತಿರಲಿಲ್ಲ. ಹೀಗಾಗಿ ಆಕೆಯ ತಾಯಿ ಮೂರು ದಿನದ ಹಿಂದೆ ಜ್ಯೋತಿ ಬಳಿಯಿದ್ದ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಬೇಸರಗೊಂಡ ವಿದ್ಯಾರ್ಥಿನಿ ತನ್ನ ಕೋಣೆಯೊಳಗೆ ಹೋಗಿ ನೇಣು ಹಾಕಿಕೊಂಡಿದ್ದಾಳೆ.

ಸ್ಥಳೀಯರ ನೆರವಿನೊಂದಿಗೆ ಪೋಷಕರು ಬಾಗಿಲು ಮುರಿದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಚಿತ್ತರಂಜನ್ ನ್ಯಾಷನಲ್ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟೊತ್ತಿಗಾಗಲೆ ಆಕೆ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಬಾಲಕಿ ಡೆತ್ ನೋಟ್ ಬರೆದಿಟ್ಟಿಲ್ಲ. ಹೀಗಾಗಿ ಹೆತ್ತವರ ಹೇಳಿಕೆ ಆಧರಿಸಿ ಕೇಸ್ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ