ಚಳಿಗಾಲದ ಅಧಿವೇಶನದಲ್ಲಿ ಜಿಎಸ್ಟಿ ಮಸೂದೆ ಮಂಡನೆಗೆ ಸಿದ್ದವಾಗಿರುವ ಪ್ರಧಾನಿ ಮೋದಿ ನೇತೃತ್ವದ ಸರಕಾರ, ಇದೀಗ ಕಾಂಗ್ರೆಸ್ ಪಕ್ಷವನ್ನು ಓಲೈಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಚಾಯಿ ಪೇ ಚರ್ಚೆಗೆ ಆಹ್ವಾನ ನೀಡಿದೆ.
ಪ್ರಧಾನಿ ಮೋದಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯವರಿಗೆ ದೂರವಾಣಿ ಕರೆ ಮಾಡಿ ಆಹ್ವಾನ ನೀಡಿರುವುದನ್ನು ಖಚಿತಪಡಿಸಿದ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೇಳಿಕೆ ನೀಡಿ, ಸಂಸತ್ತಿನಲ್ಲಿ ನೆನೆಗುದಿಯಲ್ಲಿ ಮಸೂದೆಗಳ ಬಗ್ಗೆ ಚರ್ಚಿಸಲು ಸೋನಿಯಾ, ಮನಮೋಹನ್ ಸಿಂಗ್ ಅವರಿಗೆ ಪ್ರಧಾನಿ ಆಹ್ವಾನ ನೀಡಿದ್ದಾರೆ. ಸಂಸತ್ತಿನ ಕಲಾಪ ಸುಗಮವಾಗಿ ನಡೆಯಬೇಕು ಎನ್ನುವುದೇ ಪ್ರತಿಯೊಬ್ಬ ಸಂಸದನ ಬಯಕೆಯಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿ ಮಾಡಿ ಜಿಎಸ್ಟಿ ಮಸೂದೆ ಬಗ್ಗೆ ಚರ್ಚಿಸಿದ್ದಾರೆನ್ನಲಾಗಿದೆ. ಸೋನಿಯಾ ಅವರೊಂದಿಗೆ ಚರ್ಚೆ ನಡೆಸುವುದಾಗಿ ಮನಮೋಹನ್ ಪ್ರಧಾನಿ ಮೋದಿಯವರಿಗೆ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.