ಎನ್‌ಡಿಎ ಸರಕಾರದಿಂದ ರೈತರ ಭೂಮಿ ಕಬಳಿಸುವ ಸಂಚು:ರಾಹುಲ್ ಗಾಂಧಿ

ಮಂಗಳವಾರ, 18 ಆಗಸ್ಟ್ 2015 (17:57 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಭೂ ಸ್ವಾಧೀನ ಮಸೂದೆ ಜಾರಿಗೊಳಿಸುವ ಮೂಲಕ ರೈತರ ಭೂಮಿಯನ್ನು ಕಬಳಿಸುವ ಸಂಚು ನಡೆಸಿದೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
 
ಎರಡು ದಿನಗಳ ಭೇಟಿಗಾಗಿ ಅಮೇಥಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಮೋದಿ ಸರಕಾರ ಕೇವಲ ಬಂಡವಾಳಶಾಹಿಗಳಿಗಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಗುಡುಗಿದ್ದಾರೆ.
 
ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಸಧೃಡಗೊಳಿಸಬೇಕಾಗಿದೆ ಎಂದು ರಾಹುಲ್ ಗಾಂಧಿ, ರೈತರೊಂದಿಗೆ ನಡೆಸಿದ ಸಂವಾದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ.
 
ಪ್ರಧಾನಿ ಮೋದಿ ಅಧಿಕಾರಕ್ಕೆ ಬರುವ ಮುಂಚೆ ಹಲವಾರು ಭರವಸೆಗಳನ್ನು ನೀಡಿದ್ದರೂ ಆದರೆ, ಯಾವ ಭರವಸೆಯೂ ಜಾರಿಗೆ ಬಂದಿಲ್ಲ. ವಿದೇಶಿ ಬ್ಯಾಂಕ್‌ಗಳಲ್ಲಿರುವ ಕಪ್ಪು ಹಣ ತರುತ್ತೇನೆ ಎಂದು ನೀಡಿದ ಭರವಸೆ ಹುಸಿಯಾಗಿ ಹೋಗಿದೆ ಎಂದರು. 
 
ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಹಲವಾರು ದೇಶಗಳಿಗೆ ಭೇಟಿ ನೀಡಿರುವ ಮೋದಿ, ಸಾವಿರಾರು ಸಂಖ್ಯೆಯಲ್ಲಿ ರೈತರು ದೇಶದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ರೈತರನ್ನು ಭೇಟಿ ಮಾಡುವ ಸೌಜನ್ಯ ತೋರುತ್ತಿಲ್ಲ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ