ರೈತರ ಆತ್ಮಹತ್ಯೆ ಹಿನ್ನೆಲೆ: ರಾಹುಲ್ ಗಾಂಧಿ ನಾಳೆ ರಾಜಧಾನಿಗೆ

ಬುಧವಾರ, 22 ಜುಲೈ 2015 (16:18 IST)
ರಾಜ್ಯದಲ್ಲಿ ರೈತರ ಆತ್ಮಹತ್ಯೆ ಸಱಣಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. 
 
ರಾಜ್ಯದಲ್ಲಿ ರೈತರು ಸಾಲಬಾಧೆ, ಕಬ್ಬಿಗೆ ಬೆಂಬಲ ಬೆಲೆ ನಿಗದಿಗೊಳಿಸದಿರುವುದು ಹಾಗೂ ಕಬ್ಬಿನ ಬಾಕಿ ಹಣ ಪಾವತಿಸಿಲ್ಲ ಎಂಬ ಕಾರಣದಿಂದ ರೈತರು ಸರಣಿಯೋಪಾದಿಯಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಹುಲ್ ನಾಳೆ ಬೆಳಗ್ಗೆ ರಾಜಧಾನಿ ಬೆಂಗಳೂರಿಗೆ ಆಗಮಿಸುತ್ತಿದ್ದು, ನಗರದ ಕುಮಾರ ಕೃಪಾ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ. 
 
ಇನ್ನು ಭೇಟಿ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಪ್ರಾದೇಶಿಕ ಕಾಂಗ್ರೆಸ್ ಘಟಕದ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರನ್ನು ಸಂಪರ್ಕಿಸಿ ರೈತರ ಆತ್ಮಹತ್ಯೆ ಸಂಬಂಧ ಚರ್ಚಿಸಲಿದ್ದಾರೆ ಎನ್ನಲಾಗಿದೆ. ಬಳಿಕ ಆಂಧ್ರ ಪ್ರದೇಶದ ಅನಂತಪುರಂನಲ್ಲಿ ಖಾಸಗಿ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ಅನಂತಪುರಂಗೆ ತೆರಳಲಿದ್ದಾರೆ ಎಂದು ಹೇಳಲಾಗಿದೆ. 

ವೆಬ್ದುನಿಯಾವನ್ನು ಓದಿ