ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶ ದ್ರೋಹಿ: ಸಾಧ್ವಿ ನಿರಂಜನ್

ಮಂಗಳವಾರ, 16 ಫೆಬ್ರವರಿ 2016 (14:50 IST)
ಜವಾಹರ್ ಲಾಲ್ ನೆಹರು ವಿಶ್ವ ವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯಾ ಕುಮಾರ್ ಅವರನ್ನು ಬೆಂಬಲಿಸುತ್ತಿರುವ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರದ್ರೋಹಿಯಾಗಿದ್ದಾರೆ ಎಂದು ಕೇಂದ್ರ ಆಹಾರ ಸಂಸ್ಕರಣ ಖಾತೆ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಗುಡುಗಿದ್ದಾರೆ. 
 
ಭಯೋತ್ಪಾದಕರನ್ನು ಬೆಂಬಲಿಸುವುದು ರಾಷ್ಟ್ರದ್ರೋಹದ ಕಾರ್ಯ. ಅದನ್ನು ರಾಹುಲ್ ಗಾಂಧಿ ಮಾಡಿದ್ದರಿಂದ ಅವರ ವಿರುದ್ಧ ದೇಶದ್ರೋಹಿ ಕೇಸ್ ದಾಖಲಿಸಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.
 
ಜೆಎನ್‌ಯು ಪ್ರಕರಣದಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿದ ಸಾಧ್ವಿ, ದೇಶದ್ರೋಹಿ ವಿದ್ಯಾರ್ಥಿಗಳನ್ನು ಬೆಂಬಲಿಸುತ್ತಿರುವ ರಾಹುಲ್ ಗಾಂಧಿ ಮತ್ತು ಎಡಪಕ್ಷಗಳ ನಾಯಕರ ವಿರುದ್ಧ ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
 
ವಿಶ್ವ ಸಮುದಾಯದ ಮುಂದೆ ಭಾರತ ದೇಶದ ಇಮೇಜ್‌ಗೆ ಧಕ್ಕೆ ತರುವ ಸಂಚಾಗಿದೆ. ಕಳೆದ 19 ತಿಂಗಳ ಅವಧಿಯಲ್ಲಿ ನಾವು ದೇಶದ ಇಮೇಜ್‌ಗೆ ಧನಾತ್ಮಕತೆಯನ್ನು ತರುವ ನಿಟ್ಟಿನಲ್ಲಿ ಹಗಲಿರಳು ಶ್ರಮಿಸುತ್ತಿದ್ದೇವೆ. ನಮ್ಮ ಕಠಿಣ ಪರಿಶ್ರಮ ವಿಪಕ್ಷಗಳಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ ಎಂದರು. 
 
ದೇಶದ್ರೋಹ ಆರೋಪದ ಮೇಲೆ ಬಂಧಿತನಾಗಿರುವ ಕನ್ಹಯ್ಯಾ ಕುಮಾರ್‌ನನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಮತ್ತು ಎಡಪಕ್ಷಗಳ ನಾಯಕರು ಪಾಲ್ಗೊಂಡಿದ್ದರು.

ವೆಬ್ದುನಿಯಾವನ್ನು ಓದಿ