ನವದೆಹಲಿ: ದೇಶದೆಲ್ಲೆಡೆ ದೀಪಾವಳಿ ಸಂಭ್ರಮ ಮನೆ ಮಾಡಿದ್ದು, ಹಬ್ಬಕ್ಕೆ ಇನ್ನು ಐದು ದಿನ ಮಾತ್ರ ಬಾಕಿ ಇದೆ. ಈ ಬೆನ್ನಲೇ ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ಮಾರಾಟಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ತೀಪು ಹೊರಡಿಸಿದೆ.
ದೆಹಲಿಯ ಎನ್ಸಿಆರ್ ಪ್ರದೇಶದಲ್ಲಿ ಹಸಿರು ಪಟಾಕಿ ಹೊರತುಪಡಿಸಿ ಉಳಿದ ಯಾವುದೇ ರೀತಿಯ ಪಟಾಕಿ ಮಾರಾಟ ಮಾಡಲು ಅವಕಾಶ ಇರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ದೆಹಲಿಯಲ್ಲಿ ಕೇವಲ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಕಲ್ಪಿಸಿದೆ. ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಹಸಿರು ಪಟಾಕಿಗಳನ್ನು ಸಿಡಿಸಲು ಮಾತ್ರ ಅವಕಾಶ ನೀಡಲಾಗಿದ್ದು, ಈ ಬಾರಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಬ್ರೇಕ್ ಹಾಕಿದೆ.
ಬೇರಿಯಂ ಸೇರಿ ನಿಷೇಧಿತ ರಾಸಾಯನಿಕ ಬಳಸಿರುವ ಪಟಾಕಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅನುಮತಿ ಇದೆ ಎಂದಿದೆ. ಈ ಮೂಲಕ ಪಟಾಕಿ ಮಾರಾಟಗಾರರ ಮೇಲೆ ನಿಗಾ ಇಟ್ಟಿದ್ದು, ವ್ಯಾಪಾರಕ್ಕೆ ಕಟ್ಟುನಿಟ್ಟನ ಕ್ರಮಗಳನ್ನು ಜಾರಿಗೆ ಮಾಡಿದೆ.
ಹಬ್ಬದಂದು ರಾತ್ರಿ 8 ರಿಂದ 10 ರವರೆಗೆ ಹಸಿರು ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಿದೆ. ಇದಕ್ಕಾಗಿ ಹಲವು ಷರತ್ತುಗಳನ್ನು ವಿಧಿಸಿದ್ದು, ರಾಷ್ಟ್ರೀಯ ಪರಿಸರ ಎಂಜಿನಿಯರಿಂಗ್ ಸಂಶೋಧನಾ ಸಂಸ್ಥೆ ಅನುಮೋದಿಸಿದ ಹಸಿರು ಪಟಾಕಿಗಳನ್ನು ಮಾತ್ರ ತಯಾರಿಸಿ ಮಾರಾಟ ಮಾಡಬೇಕು ಎಂಬುದು ಸೇರಿದಂತೆ ಕೆಲವು ಷರತ್ತುಗಳ ಅಡಿಯಲ್ಲಿ ಪಟಾಕಿಗಳ ಬಳಕೆಗೆ ಅನುಮತಿ ನೀಡಿದೆ.