ಉತ್ತರಾಖಂಡ್‌: ವಿಶ್ವಾಸಮತ ಸಾಬೀತು ಪಡಿಸುತ್ತಾರಾ ರಾವತ್?

ಮಂಗಳವಾರ, 10 ಮೇ 2016 (10:08 IST)
ಉತ್ತರಾಖಂಡದಲ್ಲಿ ಹಲವು ದಿನಗಳಿಂದ ಎದುರಾಗಿರುವ ಸಾಂವಿಧಾನಿಕ ಬಿಕ್ಕಟ್ಟಿಗೆ ಇಂದು ಅಂತಿಮ ತೆರೆ ಬೀಳುವ ಸಾಧ್ಯತೆ ಇದೆ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪ್ರಕ್ರಿಯೆ ನಡೆಯಲಿದೆ.
 
ಮಧ್ಯಾಹ್ನ 1 ಗಂಟೆಗೆ ಆರಂಭವಾಗಲಿರುವ ಈ ಪ್ರಕ್ರಿಯೆ 1 ಗಂಟೆಗೆ ಸಮಾಪ್ತಿಯಾಗಲಿದೆ. ವಿಧಾನಸಭೆ ಕಾರ್ಯದರ್ಶಿ, ಮತ್ತು ಸಂಸದೀಯ ಕಾರ್ಯದರ್ಶಿ ಈ ಪ್ರಕ್ರಿಯೆ ಮೇಲುಸ್ತುವಾರಿ ನೋಡಿಕೊಳ್ಳಲಿದ್ದಾರೆ. ಈ ಎರಡು ಗಂಟೆಗಳ ಅವಧಿಗೆ ರಾಷ್ಟ್ರಪತಿ ಆಳ್ವಿಕೆಯನ್ನು ತೆರವುಗೊಳಿಸಲಾಗುವುದು.
 
ಬಂಡಾಯ ಶಾಸಕರ ಅನರ್ಹತೆಯನ್ನು ನಿನ್ನೆ ಉತ್ತರಾಖಂಡ ಹೈಕೋರ್ಟ್ ಎತ್ತಿ ಹಿಡಿದಿತ್ತು. ಆದರೆ ಹೈಕೋರ್ಟ್ ತೀರ್ಪು ಪ್ರಶ್ನಿಸಿ  ಸುಪ್ರೀಂ ಮೊರೆ ಹೋಗಿದ್ದ ಶಾಸಕರು, ಮಧ್ಯಂತರ ತೀರ್ಪು ಪ್ರಕಟಿಸುವಂತೆ ಮನವಿ ಮಾಡಿದ್ದರು. ಆದರೆ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್, ಪ್ರಕರಣದ ವಿಚಾರಣೆಯನ್ನು ಮುಂದೂಡಿದೆ. ಈ ಬಂಡಾಯ ಶಾಸಕರು ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದಿರುವುದು ರಾವತ್‌ಗೆ ಅನುಕೂಲಕರವಾಗಲಿದೆ ಎನ್ನಲಾಗುತ್ತಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಪದಚ್ಯುತ ಮುಖ್ಯಮಂತ್ರಿ ಹರೀಶ್ ರಾವತ್ ವಿಶ್ವಾಸಮತ ಯಾಚಿಸಲಿದ್ದಾರೆ. 
 
ಶಾಸಕರಿಗೆ ಮಾತ್ರ ವಿಧಾನಸಭೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ರಾವತ್ ಸುಲಭವಾಗಿ ಬಹುಮತ ಪಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತದೆ.

ವೆಬ್ದುನಿಯಾವನ್ನು ಓದಿ