ಬಿಜೆಪಿಯಲ್ಲಿ ಬಲಪ್ರದರ್ಶನದ ಅಗತ್ಯವಿಲ್ಲ: ಸದಾನಂದ ಗೌಡ

ಭಾನುವಾರ, 19 ಫೆಬ್ರವರಿ 2012 (17:10 IST)
ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯ, ಗೊಂದಲಗಳಿದ್ದರೆ ಅವುಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲಾಗುವುದು. ಯಾವುದೇ ಶಕ್ತಿ ಪ್ರದರ್ಶನ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸದಾನಂದ ಗೌಡ ತಿಳಿಸಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಇದುವರೆಗೂ ಯಾವ ಶಕ್ತಿ ಪ್ರದರ್ಶನವೂ ನಡೆದಿಲ್ಲ. ಮುಂದೆಯೂ ನಡೆಯುವುದಿಲ್ಲ ಎಲ್ಲವನ್ನೂ ಮಾತುಕತೆಗಳ ಮೂಲಕವೇ ಇತ್ಯರ್ಥಪಡಿಸಿಕೊಳ್ಳಲಾಗುವುದು ಎಂದು ಗೃಹ ಕಚೇರಿ ಕೃಷ್ಣಾದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಹುಟ್ಟುಹಬ್ಬದಂದು ಅವರ ಬೆಂಬಲಿಗರು ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ನಡೆಸುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ವ್ಯಕ್ತಿ ಪ್ರತಿಷ್ಠೆ ಇಲ್ಲ. ಪಕ್ಷ ಪ್ರತಿಷ್ಠೆ ಮಾತ್ರ ಇರುವುದು. ಯಾವುದೇ ಶಕ್ತಿ ಪ್ರದರ್ಶನ ಅಗತ್ಯವಿಲ್ಲ ಎಂದರು.

ಗೋಕಾಕ್‌ನಲ್ಲಿ ಶುಕ್ರವಾರ ನಡೆದ ಪಂಚಮಸಾಲಿ ಸಮಾವೇಶದಲ್ಲಿ ಭಾಗವಹಿಸದಂತೆ ತಮ್ಮ ಮೇಲೆ ಯಾರೂ ಒತ್ತಡ ಹೇರಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

ವೆಬ್ದುನಿಯಾವನ್ನು ಓದಿ